ಪ್ರವಾಸೋದ್ಯಮ ದಿನಾಚರಣೆ: ಸಲಹೆಗಳನ್ನು ಪಾಲಿಸಲು ಹೋಟೆಲ್, ರೆಸ್ಟೋರೆಂಟ್ಗಳಿಗೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಸೆ.27ರಂದು ಟೂರಿಸಂ ಗ್ರೀನ್ ಇನ್ವೆಸ್ಟ್ಮೆಂಟ್ (ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು) ಎಂಬ ಸಂದೇಶದೊಂದಿಗೆ ಪ್ರಸಕ್ತ ಸಾಲಿನ ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಟೆಲ್, ರೆಸಾರ್ಟ್ ಮತ್ತು ಹೋಮ್ಸ್ಟೇಗಳಿಗೆ ಕೆಲವು ಸಲಹೆ ಹಾಗೂ ಸೂಚನೆಗಳನ್ನು ಪಾಲಿಸುವಂತೆ ಪ್ರವಾಸೋದ್ಯಮ ಇಲಾಖೆ ಸೂಚಿಸಿದೆ.
ಈ ಸಂದರ್ಭದಲ್ಲಿ ಹೊಟೇಲ್, ರೆಸಾರ್ಟ್ ಅಥವಾ ಹೋಮ್ಸ್ಟೇಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸ್ವಚ್ಛತೆ, ಪರಿಸರ ಮಾಲಿನ್ಯ ತಡೆಗಟ್ಟಲು ಹಾಗೂ ನೈರ್ಮಲ್ಯ ಶುಚಿತ್ವದ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ವಿವಿಧ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಪ್ರಸ್ತುತಿ ಪಡಿಸಲು ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಈ ಕೆಳಕಂಡ ಸಾಮಾನ್ಯ ಸಲಹೆ ಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿರುತ್ತದೆ.
ಜಿಲ್ಲೆಯ ಎಲ್ಲಾ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಈ ಬಾರಿಯ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಥೀಮ್ ಅನ್ನು ಪರಿಸರ ಸ್ನೇಹಿ ಬಟ್ಟೆ ಬ್ಯಾನರ್ನಲ್ಲಿ ಮುದ್ರಿಸಿ ಪ್ರದರ್ಶಿಸಬೇಕು. ಎಲ್ಲಾ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಸಾಂಪ್ರದಾಯಿಕ ಖಾದ್ಯಗಳನ್ನು ನೀಡಬೇಕು. ಪ್ರವಾಸಿ ತಾಣಗಳ ಕುರಿತ ವೀಡಿಯೋಗಳನ್ನು ಹೋಟೆಲ್ಗಳು ಹಾಗೂ ಕಚೇರಿಗಳಲ್ಲಿ ಪ್ರದರ್ಶಿಸಬೇಕು. ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳುವುದರೊಂದಿಗೆ ಸಸಿಗಳನ್ನು ನೆಡುವುದು, ಹೋಟೆಲ್ ಹಾಗೂ ರೆಸ್ಟೋರೆಂಟ್ಗಳನ್ನು ವಿದ್ಯುತ್ ದೀಪಾಲಂಕಾರಗಳಿಂದ ಅಲಂಕರಿಸಬೇಕು.
ಹೋಟೆಲ್ ಹಾಗೂ ರೆಸ್ಟೋರೆಂಟ್ ಕೊಠಡಿಗಳ ದರಗಳಲ್ಲಿ ವಿಶೇಷ ರಿಯಾಯಿತಿಯನ್ನು ನೀಡಬೇಕು. ಹೋಟೆಲ್ಗಳಲ್ಲಿ ಛಾಯಾಚಿತ್ರ ಗಳನ್ನೊಳಗೊಂಡ ಸೆಲ್ಫಿ ಪಾಯಿಂಟ್ಗಳನ್ನು ಅಳವಡಿಸಬೇಕು. ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳುವ ಮೂಲಕ ಸಾಮಾನ್ಯ ಸಲಹೆಗಳನ್ನು ಪಾಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







