ಉಡುಪಿ ಜಿಲ್ಲೆಯಲ್ಲಿ 18,500 ಬೀದಿನಾಯಿ; ಶೀಘ್ರ ಆಶ್ರಯ ತಾಣ

ಉಡುಪಿ: ಜಿಲ್ಲೆಯಲ್ಲಿ ಸರಿಸುಮಾರು 18,500 ಬೀದಿನಾಯಿಗಳನ್ನು ಗುರುತಿಸಲಾಗಿದ್ದು, ನಾಯಿಗಳಿಗೆ ಆಶ್ರಯ ತಾಣಕ್ಕಾಗಿ ಉಡುಪಿ ನಗರ ಭಾಗದಲ್ಲಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಇಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಶೀಘ್ರದಲ್ಲೇ ಸುಸಜ್ಜಿತ ಆಶ್ರಯ ತಾಣ ನಿರ್ಮಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.
ಗುರುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಮುಂದಿನ ಮೂರು ದಿನಗಳಲ್ಲಿ ತಾಲೂಕು ಮತ್ತು ನಗರ ಪ್ರದೇಶಕ್ಕೆ ಒಂದರಂತೆ ಬೀದಿ ನಾಯಿಗಳಿಗೆ ಆಶ್ರಯ ತಾಣ ನಿರ್ಮಿಸಲು ಬೇಕಾದ ಜಾಗ ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಬೀದಿನಾಯಿಗಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ವೋಚ್ಛ ನ್ಯಾಯಾಲಯದ ಮಾರ್ಗಸೂಚಿಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೀದಿನಾಯಿಗಳಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಿದ್ದು, ಅವುಗಳ ಪಾಲನೆ ಮಾಡಿ, ವರದಿ ನೀಡಬೇಕು ಎಂದೂ ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಶಸ್ತ್ರಚಿಕಿತ್ಸೆಯ ಬಳಿಕ ನಾಯಿ ಗಳನ್ನು ಅದೇ ಸ್ಥಳಕ್ಕೆ ವಾಪಾಸು ಬಿಡಬೇಕು. ರೇಬೀಸ್ ಕಾಯಿಲೆ, ಸಂಶಯಾಸ್ಪದ ರೋಗ ಪೀಡಿತ ಆಕ್ರಮಣಕಾರಿ ನಡತೆ ಇರುವ ನಾಯಿಗಳನ್ನು ಆಶ್ರಯ ತಾಣಗಳಿಗೆ ಬಿಡಬೇಕು ಎಂದರು.
ಇದಕ್ಕಾಗಿ ಸಹಾಯವಾಣಿ ಸ್ಥಾಪಿಸಿ ಅವುಗಳನ್ನು ಪ್ರದರ್ಶಿಸಬೇಕು. ಆಶ್ರಯ ತಾಣಗಳಲ್ಲಿ ಸ್ವಚ್ಚತೆ, ಆಹಾರ, ನೀರು, ನೆರಳು, ಪಶು ವೈದ್ಯಕೀಯ ಚಿಕಿತ್ಸೆ ಗಳನ್ನು ಒದಗಿಸಬೇಕು. ಪ್ರಾಣಿಗಳ ಹಾಗೂ ನಾಗರಿಕರ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕುಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಸ್ಥಳೀಯ ಮುನ್ಸಿಪಲ್ ಅಧಿಕಾರಿಗಳು ಸಮನ್ವಯದೊಂದಿಗೆ ಪದೇ ಪದೇ ಬೀಡಾಡಿ ದನಗಳು ಮತ್ತು ಪ್ರಾಣಿಗಳು ಕಾಣಿಸುವ ರಾಷ್ಟ್ರೀಯ ಹೆದ್ದಾರಿ ಪರಿಮಿತಿಗಳನ್ನು ಗುರುತಿಸಬೇಕು. ಅಲ್ಲಿರುವ ಎಲ್ಲಾ ದನ ಸೇರಿದಂತೆ ಬೀಡಾಡಿ ಪ್ರಾಣಿಗಳನ್ನು ಆಶ್ರಯ ತಾಣಗಳಿಗೆ ಅಥವಾ ಗೋಶಾಲೆಗಳಿಗೆ ಸ್ಥಳಾಂತರಿಸಬೇಕು ಎಂದ ಅವರು, ಹೆದ್ದಾರಿಗಳಲ್ಲಿ ಸ್ಪಷ್ಟವಾಗಿ ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಬೇಕು. ಈ ಸಂಖ್ಯೆಗಳನ್ನು ಎನ್ಹೆಚ್ಎಐ ಕಂಟ್ರೋಲ್ ರೂಂ ಮತ್ತು ಸ್ಥಳೀಯ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂಗೆ ಲಿಂಕ್ ಮಾಡಬೇಕು ಎಂದರು.
ಸಾಕುನಾಯಿಗಳ ಮಾಲಕರು ನೋಂದಣಿ ಮಾಡಿಕೊಂಡು ನಾಯಿಗಳಿಗೆ ಕಡ್ಡಾಯವಾಗಿ ಕಾಲರ್ ಪಟ್ಟಿ ಅಳವಡಿಸಬೇಕು. ಕಾಲರ್ ಪಟ್ಟಿ ಇಲ್ಲದೆ ರಸ್ತೆ ಬದಿ ಅಲೆದಾಡುತ್ತಿದ್ದರೆ ಅವುಗಳನ್ನು ಬೀದಿ ನಾಯಿ ಎಂದು ಪರಿಗಣಿಸಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಪ್ರಕಟಣೆಗೊಳಿಸಿ ಎಂದು ಸೂಚನೆ ನೀಡಿದರು.
ಸ್ಥಳಾಂತರ ಮಾಡಲಾಗುವ ಬೀದಿ ನಾಯಿಗಳ ಆಶ್ರಯ ತಾಣಗಳ ನಿರ್ವಹಣೆಗಾಗಿ ಪ್ರಾಣಿ ಕಲ್ಯಾಣ ಸಂಸ್ಥೆಗಳು ಹಾಗೂ ಪಶುಸಂಗೋಪನೆ ಇಲಾಖೆಯ ಸಹಯೋಗದೊಂದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ನಾಯಿ ಕಡಿತದಿಂದ ಉಂಟಾಗಬಹುದಾದ ರೇಬೀಸ್ ರೋಗದ ಅಪಾಯ ಮತ್ತು ಲಸಿಕೆಯ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ರೇಬೀಸ್ ನಿರೋಧಕ ಲಸಿಕೆಯ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿಯಲ್ಲಿ 10 ಆಹಾರ ನೀಡುವ ತಾಣ
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ 10 ಕಡೆಗಳಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಜಾಗಗಳನ್ನು ಗುರುತಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಸಹ ಆದಷ್ಟು ಶೀಘ್ರವಾಗಿ ಜಾಗ ಗುರುತಿಸುವ ಕೆಲಸವಾಗಬೇಕು. ಎಲ್ಲರಿಗೂ ಗುರುತಿನ ಚೀಟಿ ನೀಡಿ ನಿಗದಿಪಡಿಸಿದ ಜಾಗದಲ್ಲೆ ಆಹಾರ ನೀಡುವಂತೆ ಕ್ರಮ ಕೈಗೊಳ್ಳಬೇಕು. ಇದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.
ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ, ಸಾರಿಗೆ, ನಗರಾಭಿವೃದ್ದಿ, ಪಂಚಾಯತ್ರಾಜ್, ಪಶುಪಾಲನಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕು. ನಾಯಿಗಳ ಆರೈಕೆಗೆ ಸೂಕ್ತ ಸ್ಥಳವನ್ನು ಗುರುತಿಸಿ ಸಂವೇದನಾಶೀಲರಾಗಿ ಆದಷ್ಟು ಬೇಗ ಅವುಗಳನ್ನು ಸ್ಥಳಾಂತರಿಸಬೇಕು ಎಂದರು.







