ಉಡುಪಿ | ಜಿಲ್ಲಾಸ್ಪತ್ರೆಯಲ್ಲಿ ತುರ್ತು ಆರೈಕೆ- ಚೇತರಿಕೆ ಕೇಂದ್ರ ಉದ್ಘಾಟನೆ

ಉಡುಪಿ, ನ.12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಹಾಗೂ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿ ನಲ್ಲಿರುವ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಹೊಸದಾಗಿ ತೆರೆಯಲಾದ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರದ ಉದ್ಘಾಟನೆ ಇತ್ತೀಚೆಗೆ ನಡೆಯಿತು.
ಡಾ.ಎ.ವಿ.ಬಾಳಿಗಾ ಚಾರಿಟೀಸ್ ಎಂಬ ಎನ್ಜಿಒ ಸಂಸ್ಥೆ ನಡೆಸುವ ಈ ಕೇಂದ್ರವನ್ನು ಉದ್ಘಾಟಿಸಿದ ಮಣಿಪಾಲ ಕೆಎಂಸಿ ಮನೋರೋಗ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಎಸ್.ವಿ.ಎನ್ ಶರ್ಮಾ, ಈ ಕೇಂದ್ರ 10 ಹಾಸಿಗೆಗಳನ್ನು ಹೊಂದಿದ್ದು, ಮಾನಸಿಕ ಅಸ್ವಸ್ಥರಿಗೆ ಮತ್ತು ನಿರಾಶ್ರಿತರಿಗೆ ಆಸ್ಪತ್ರೆ ಆಧಾರಿತ ಬಹು ಶಿಸ್ತಿನ ಸೇವೆಗಳನ್ನು ಒದಗಿಸುವುದು ಈ ಕೇಂದ್ರದ ಉದ್ದೇಶವಾಗಿದೆ ಎಂದರು.
ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ. ಬಸವರಾಜ ಜಿ.ಹುಬ್ಬಳ್ಳಿ, ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಲತಾ ನಾಯಕ್, ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ. ಭಂಡಾರಿ ಉಪಸ್ಥಿತರಿದ್ದರು.





