ಉಡುಪಿ | ನ.28ರಂದು ಕೃಷ್ಣಮಠಕ್ಕೆ ಪ್ರವೇಶ ನಿರ್ಬಂಧ

ಉಡುಪಿ, ನ.26: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುತ್ತಿರುವ ಕೋಟಿ ಗೀತಾ ಲೇಖನ ಯಜ್ಞದ ಪ್ರಯುಕ್ತ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿಸಲಿರುವ ಕಾರಣ ಶುಕ್ರವಾರದಂದು ಬೆಳಿಗ್ಗೆ 8:00ರಿಂದ ಅಪರಾಹ್ನ 3:00 ಗಂಟೆಯ ವರೆಗೆ ಶ್ರೀಕೃಷ್ಣ ಮಠಕ್ಕೆ ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೂಚನೆಯನ್ನು ಗಮನಿಸಿ ಸಹಕರಿಸಬೇಕೆಂದು ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ.
ಪ್ರಧಾನಿಯವರು ಕೃಷ್ಣನ ಸನ್ನಿಧಾನಕ್ಕೆ ಆಗಮಿಸಿ, ಭಕ್ತ ಸಮೂಹದೊಂದಿಗೆ ಗೀತಾ ಪಾರಾಯಣವನ್ನು ನಡೆಸಿ ಕೃಷ್ಣನಿಗೆ ಸಮರ್ಪಿಸಲಿದ್ದಾರೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಅವರು ಆಗಮಿಸುವಾಗ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರು ಹಾಗೂ ಮಠದ ಗಣ್ಯರಿಂದ ಸಾಂಪ್ರದಾಯಿಕ ಸ್ವಾಗತ ಸಲ್ಲಿಸಲಾಗುತ್ತದೆ.
ನರೇಂದ್ರ ಮೋದಿ ಅವರು ಎಂಟು ಶತಮಾನಗಳ ಇತಿಹಾಸವಿರುವ ಶ್ರೀಕೃಷ್ಣದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ದರ್ಶನ ಮಾಡಲಿದ್ದಾರೆ. ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಕ್ಷಕಂಠ ಗೀತೆ ಸಮಾರಂಭದಲ್ಲಿ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.







