ಉಡುಪಿ| ಜಾಮೀನಿಗಾಗಿ ಕೋಟ್೯ಗೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ: ಇಬ್ಬರು ಆರೋಪಿಗಳ ಬಂಧನ

ಉಡುಪಿ: ನ್ಯಾಯಾಲಯದಲ್ಲಿ ಪ್ರಕರಣ ಒಂದಕ್ಕೆ ಸಂಬಂಧಿಸಿದ ಜಾಮೀನು ನೀಡುವಾಗ ನಕಲಿ ಆಧಾರ್ ಕಾರ್ಡ್ ಹಾಜರುಪಡಿಸಿರುವ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳದ ಉಮ್ಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿ ನೋಮಾನ್ ಎಂಬಾತನಿಗೆ ನ್ಯಾಯಾಲಯದಲ್ಲಿ ಜಾಮೀನು ನೀಡುವ ವೇಳೆ ಫಾರೂಕ್, ಪ್ರಶಾಂತ್ ಎಂಬವರ ಆಧಾರ್ ಕಾಡ್೯ ಗೆ ಕೆಟಿ ಮೊಹಮ್ಮದ್ ಎಂಬವರ ಹೆಸರು ಮತ್ತು ವಿಳಾಸವನ್ನು ನಕಲಿಯಾಗಿ ಸೃಷ್ಟಿಸಿ ತನ್ನ ಸ್ವಂತ ಲಾಭಕ್ಕಾಗಿ ಇನ್ನೊಬ್ಬ ವ್ಯಕ್ತಿಯಂತೆ ನಟಿಸಿ ಆಧಾರ್ ಕಾರ್ಡನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಉಮ್ಮರ್ ಫಾರೂಕ್ ಹಾಗೂ ನಿಶಾಂತ್ ಕುಮಾರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.




