ಉಡುಪಿ | ರೈತರ ಬೆಳೆವಿಮೆ ಪರಿಹಾರ ಮೊತ್ತ ಶೀಘ್ರವಾಗಿ ಮಂಜೂರಾತಿಗೆ ಮನವಿ

ಸಾಂದರ್ಭಿಕ ಚಿತ್ರ
ಉಡುಪಿ, ಡಿ.9: ರೈತರ ಬೆಳೆ ವಿಮೆ ಪರಿಹಾರ ಮೊತ್ತವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸಂಕಷ್ಟಕ್ಕೊಳಗಾದ ರೈತರಿಗೆ ತಕ್ಷಣ ಪರಿಹಾರ ದೊರೆತರೆ ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಲು ಸಹಾಯಕವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಮೇ ತಿಂಗಳಿನಲ್ಲಿ ವಾಡಿಕೆಯ ಸರಾಸರಿ 166 ಮಿ.ಮೀ. ಬದಲಾಗಿ 837 ಮಿ.ಮೀ.ನಷ್ಟು ಮಳೆಯಾಗಿದೆ. ಶೇ.409ರಷ್ಟು ಹೆಚ್ಚುವರಿ ಮಳೆಯಾಗಿದೆ. ಜೂನ್ ಮಾಹೆಯಲ್ಲಿಯೂ ಅಧಿಕ ಮಳೆಯಾಗಿದ್ದು, ದೇಶದಲ್ಲಿ ಅತ್ಯಧಿಕವಾಗಿ ಉಡುಪಿ ಜಿಲ್ಲೆಯಲ್ಲಿ ದಾಖಲೆ ಮಳೆ ಆಗಿದೆ.
ಪ್ರಸಕ್ತ ಸಾಲಿನಲ್ಲಿ ಮೇ 15ರಂದು ಪ್ರಾರಂಭಗೊಂಡ ಮಳೆಯು ನವೆಂಬರ್ ತಿಂಗಳ ಅಂತ್ಯದವರೆಗೂ ನಿರಂತರವಾಗಿ ಸುರಿದಿದ್ದು, ದೀರ್ಘಾವಧಿಯ ಮಳೆಗಾಲ ಎಂದೆನಿಸಿಕೊಂಡಿದೆ. ಅನೇಕ ರೈತರು ಇತ್ತೀಚಿನ ಅಕಾಲಿಕ ಮಳೆ, ಗಾಳಿ ಮತ್ತು ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಅನುಭವಿಸಿದ್ದು, ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಬೆಳೆ ವಿಮೆ ಪರಿಹಾರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಪರಿಹಾರ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ.





