ಉಡುಪಿ | ಗ್ಯಾರಂಟಿ ಯೋಜನೆಗಳು ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಯೋಜನೆ ಫಲಪ್ರದ: ಅಶೋಕ್ ಕೊಡವೂರು

ಉಡುಪಿ, ನ.26: ಸರಕಾರದ ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಹಾಗೂ ವಿಚಾರಧಾರೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಆ ಯೋಜನೆ ಫಲಪ್ರದವಾಗುತ್ತವೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
ಬುಧವಾರ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತಂತೆ ಕಲಾಜಾಥಾ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಸಂವಿಧಾನದ ಆಶಯದಂತೆ ದೇಶದ ಜನಸಾಮಾನ್ಯರಿಗೆ ಸಮಾನತೆಯನ್ನು ಕಲ್ಪಿಸುವ ದೃಷ್ಠಿಯಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ, ಜಾರಿಗೆ ತರಲಾಗಿದೆ. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡಿವೆ. ಜಿಲ್ಲೆಯ ಪ್ರತಿಯೊಬ್ಬ ಅರ್ಹರಿಗೂ ಯೋಜನೆಯನ್ನು ತಲುಪಿಸುವ ಉದ್ದೇಶದಿಂದ ಕಲಾಜಾಥ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸರಕಾರ ಜಾರಿಗೆ ಬಂದಾಗಿನಿಂದ ಈವರೆಗೆ ಸುಮಾರು ಎರಡೂವರೆ ವರ್ಷಗಳ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜಿಲ್ಲೆಯ ಅರ್ಹ ಫಲಾನುಭವಿಗಳ ಖಾತೆಗೆ 2,500 ಕೋಟಿ ರೂ.ಗಳನ್ನು ಯಾವುದೇ ಮಧ್ಯವರ್ತಿಯ ಹಾವಳಿ ಇಲ್ಲದೇ ನೇರವಾಗಿ ಜಮಾ ಮಾಡಲಾಗಿದೆ ಎಂದವರು ನುಡಿದರು.
ಕೊರೋನಾ ನಂತರ ಜೀವನ ಸಾಗಿಸಲು ಕಷ್ಟಸಾಧ್ಯ ಎನ್ನುವಂತಹ ಪರಿಸ್ಥಿತಿಯಲ್ಲಿದ್ದ ರಾಜ್ಯದ ಮಹಿಳೆಯರಿಗೆ ಗೃಹಜ್ಯೋತಿ ಯೋಜನೆ ಆರ್ಥಿಕ ಬಲ ನೀಡುವುದರೊಂದಿಗೆ ಸ್ವಾವಲಂಭಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಸುಮಾರು 55,000 ಕೋಟಿ ರೂ.ಗಳು ನೇರವಾಗಿ ಫಲಾನುಭವಿಗಳಿಗೆ ತಲುಪುತಿದ್ದು, ಬಡ ಹಾಗೂ ಮಧ್ಯಮ ವರ್ಗದವರ ಬದುಕಿಗೆ ಯೋಜನೆಗಳು ಆಶಾಕಿರಣವಾಗಿವೆ ಎಂದರು.
ಯುವನಿಧಿಗೆ ಹೆಚ್ಚು ನೊಂದಣಿ: ಯುವಜನರು ಗ್ಯಾರಂಟಿ ಯೋಜನೆ ಯಲ್ಲಿ ಒಂದಾದ ಯುವನಿಧಿ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಕೆಲವು ಗ್ರಾಮೀಣ ಭಾಗದ ಪ್ರದೇಶಗಳಿಗೆ ಸಾರಿಗೆ ಬಸ್ಗಳು ಸಂಚರಿಸುತ್ತಿಲ್ಲ ಎಂಬ ದೂರುಗಳು ಪದೇ ಪದೇ ಕೇಳಿಬರುತ್ತಿವೆ. ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಪರ್ಕ ಇಲ್ಲದೇ ಇರುವ ಕಡೆಗಳಲ್ಲಿ ಎಲೆಕ್ಟ್ರಿಕಲ್ ಬಸ್ಗಳನ್ನು ಸಂಚರಿಸು ವಂತೆ ಅವುಗಳನ್ನು ಮಹಿಳೆಯರೇ ಚಲಾಯಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದರು.
ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ ಮಾತನಾಡಿ, ರಾಜ್ಯದ ಮಹಿಳೆಯರು ಒಂದಲ್ಲಾ ಒಂದು ರೀತಿಯಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿದ್ದು, ಈ ಯೋಜನೆಯು ಅವರ ಬದುಕಿಗೆ ದಾರಿದೀಪವಾಗಿದೆ. ಗ್ಯಾರಂಟಿ ಯೋಜನೆ ಯೊಂದಿಗೆ ಪೊಲೀಸರಿಂದ ತರಬೇತಿ ಪಡೆದ ಮಹಿಳೆಯರಿಂದಲೇ ರೂಪಿಸಲಾದ ಅಕ್ಕ ಪಡೆಯು ಸಂಕಷ್ಟದಲ್ಲಿರುವ ಮಹಿಳೆಯರ ಪಾಲಿಗೆ ವರದಾನವಾಗಲಿದೆ ಎಂದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಏಳು ಕೋಟಿ ಜನರ ಬದುಕಿಗೆ ಆಸರೆಯಾಗಿ, ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಟ್ಟಿದೆ. ಈ ಯೋಜನೆ ಮತ್ತಷ್ಟು ಪರಿಣಾಮಕಾರಿಯಾಗಿ ತಲುಪುವುದರೊಂದಿಗೆ ಸಮಾಜದ ಕಟ್ಟಕಡೆಯ ಗ್ರಾಮೀಣ ಭಾಗಕ್ಕೂ ತಲುಪಿಸುವ ಉದ್ದೇಶದಿಂದ ಕಲಾಜಾಥಾ ಪ್ರಚಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಇದೇ ವೇಳೆ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಹಾಗೂ ಶ್ರೀಮಾರುತಿ ಕಲಾಸಂಘ ತೊಗಲು ಗೊಂಬೆ ಕಲಾ ತಂಡದವರು ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ತೊಗಲು ಗೊಂಬೆಯಾಟ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಪ್ರಶಾಂತ್ ಜತ್ತನ್ನ, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ರಮೇಶ್ ಕಾಂಚನ್, ಸದಸ್ಯರಾದ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ವಕ್ತಾರ ಭಾಸ್ಕರ ರಾವ್ ಕಿದಿಯೂರು, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಡಾ.ಜಿ.ಶಂಕರ್ ಕಾಲೇಜಿನ ಪ್ರಾಂಶುಪಾಲ ಡಾ. ಸೋಜನ್ ಕೆ.ಜಿ, ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕಿ ಡಾ. ನಿಕೇತನ ಹಾಗೂ ಇತರರು ಉಪಸ್ಥಿತರಿದ್ದರು.
ಕಲಾಜಾಥಾ ಅಂಗವಾಗಿ ಜಿಲ್ಲೆಯ ವಿವಿಧ ಭಾಗಗಳಿಗೆ ಪ್ರಚಾರ ವಾಹನ ಹಾಗೂ ಕ್ಷೇತ್ರ ಪ್ರಚಾರ ಕಲಾ ತಂಡಗಳು ತೆರಳಿ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲಿವೆ.







