ರಾಷ್ಟ್ರೀಯ ಲೋಕ ಅದಾಲತ್ : ಉಡುಪಿಯಲ್ಲಿ ಒಂದೇ ದಿನ 65,473 ಪ್ರಕರಣ ಇತ್ಯರ್ಥ

ಸಾಂದರ್ಭಿಕ ಚಿತ್ರ
ಉಡುಪಿ, ಡಿ.13: ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಇಂದು ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರುಗಳ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಿದ್ದು, ಒಂದೇ ದಿನದಲ್ಲಿ ಒಟ್ಟು 65,473 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಇತ್ಯರ್ಥಗೊಂಡಿರುವ 65,473 ಪ್ರಕರಣಗಳಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು-24, ಚೆಕ್ಕು ಅಮಾನ್ಯ ಪ್ರಕರಣಗಳು-343, ಬ್ಯಾಂಕ್ ಹಾಗೂ ಹಣ ವಸೂಲಾತಿ ಪ್ರಕರಣಗಳು-10, ಎಂ.ವಿ.ಸಿ. ಪ್ರಕರಣಗಳು-102, ಸಿವಿಲ್ ಪ್ರಕರಣಗಳು-247, ಇತರೆ ಕ್ರಿಮಿನಲ್ ಪ್ರಕರಣಗಳು-3002, ಕಾರ್ಮಿಕ ವ್ಯಾಜ್ಯ-1 ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು- 61,744 ಸೇರಿವೆ.
ರಾಜೀ ಮುಖಾಂತರ ಇತ್ಯರ್ಥ ಪಡಿಸಿ ಒಟ್ಟು 19.68 ಕೋಟಿ ರೂ. ಪರಿಹಾರದ ಮೊತ್ತವನ್ನು ಸಹ ಘೋಷಿಸಲಾಗಿದೆ ಎಂದು ಕಿರಣ್ ಎಸ್.ಗಂಗಣ್ಣವರ್ ತಿಳಿಸಿದ್ದಾರೆ.
ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ಹಾಗೂ ಬ್ರಹ್ಮಾವರ, ಅಭಿಯೋಜನೆ ಇಲಾಖೆ, ಸರಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬಾಂಕ್, ಕಕ್ಷಿದಾರರು ಹಾಗೂ ಇತರ ಸರಕಾರಿ ಇಲಾಖೆಗಳ ಸಂಪೂರ್ಣ ಸಹಕಾರ ದೊಂದಿಗೆ ಇಂದಿನ ಲೋಕ ಅದಾಲತ್ ಅನ್ನು ಯಶಸ್ವಿಗೊಳಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.







