ಉಡುಪಿ | ವಿದ್ಯಾರ್ಥಿಗಳಿಗೆ ಕಾರಂತರ ಪರಿಚಯ ಅಗತ್ಯ: ಡಾ.ಎಕ್ಕಾರು

ಉಡುಪಿ, ಡಿ.15: ವಿದ್ಯಾರ್ಥಿಗಳಿಗೆ ಕಾರಂತರನ್ನು ಪರಿಚಯಿಸುವುದರೊಂದಿಗೆ ಸಾಹಿತ್ಯ ಮತ್ತು ಸಂಸ್ಕೃತಿಯ ವಿಚಾರವನ್ನು ತಿಳಿಸಿ ಓದುವ ಹವ್ಯಾಸವನ್ನು ಬೆಳೆಸುವುದು ಕಾರ್ಯಕ್ರಮ ಮುಖ್ಯ ಉದ್ದೇಶವಾಗಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾರ್ಕಳ ವೆಂಕಟರಮಣ ಮಹಿಳಾ ಕಾಲೇಜಿನ ಸಹಯೋಗದಲ್ಲಿ ಶನಿವಾರ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾದ ಅರಿವಿನ ಬೆಳಕು ಉಪನ್ಯಾಸ ಮಾಲೆ -11 ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.
ಡಾ.ಶಿವರಾಮ ಕಾರಂತರು ಕನ್ನಡ ಸಾಹಿತ್ಯ ಮಾತ್ರವಲ್ಲದೇ ಭಾರತೀಯ ಸಾಹಿತ್ಯದಲ್ಲಿಯೂ ಸಹ ದೊಡ್ಡ ಹೆಸರು. ಕರಾವಳಿ ಕರ್ನಾಟಕದ ದೈತ್ಯ ಪ್ರತಿಭೆ ಕಾರಂತರ ಪರಿಚಯ ವ್ಯಾಪಕವಾಗಿ ನಡೆದಿಲ್ಲ ಎಂದು ಅವರು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಕಳ ಎಸ್.ವಿ.ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಕೆ.ಪಿ.ಶೆಣೈ ಮಾತನಾಡಿ, ಕಾರಂತರು ಕೇವಲ ಸಾಹಿತ್ಯ ಕ್ಷೇತ್ರಕ್ಕೆ ಸೀಮಿತವಾಗದೇ ಯಕ್ಷಗಾನ ಹಾಗೂ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಸಿ ಯಕ್ಷಗಾನಕ್ಕೆ ಹೊಸ ರೂಪ ನೀಡಿದರು. ಇಂದಿನ ಯುವ ಪೀಳಿಗೆಗಳು ಅವರ ಕೃತಿಗಳನ್ನು ಓದುವ ಮೂಲಕ ಅದರ ಮೌಲ್ಯಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕಿ ಶಾಲಿನಿ ಯು.ಬಿ ಕಾರಂತರ ಕಾದಂಬರಿಗಳ ಸಿನೆಮಾಗಳಲ್ಲಿ ಬದುಕಿನ ಅಭಿವ್ಯಕ್ತಿ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯೆ ಆತ್ರಾಡಿ ಅಮೃತ ಶೆಟ್ಟಿ, ಉಪನ್ಯಾಸಕಿ ರೇಖಾ, ಸಾಹಿತ್ಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ.ಗೀತಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಮಂಜುಳ ಕಾರ್ಯಕ್ರಮ ನಿರೂಪಿಸಿ, ಶ್ರೀನಿಧಿ ವಂದಿಸಿದರು.







