ಉಡುಪಿ | ಡಿ.6ರಂದು ವಿಶ್ವ ಏಡ್ಸ್ ದಿನ

ಉಡುಪಿ, ಡಿ.5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿದ್ಯಾರತ್ನ ಸ್ಕೂಲ್ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲು ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸ್, ಗಾರ್ಡ್ ಸಂಸ್ಥೆ, ದೀಪ ಜ್ಯೋತಿ ನೆಟ್ವರ್ಕ್, ಆಸರೆ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಮತ್ತು ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಪ್ರಗತಿಸೌಧ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ -ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಶನಿವಾರ ಡಿ.6ರಂದು ಬೆಳಗ್ಗೆ 10:00 ಗಂಟೆಗೆ ಅಂಬಲಪಾಡಿಯಲ್ಲಿರುವ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಸಭಾಂಗಣ- ಪ್ರಗತಿಸೌಧ ಇಲ್ಲಿ ನಡೆಯಲಿದೆ.
ಇದರೊಂದಿಗೆ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಜಿ ಹುಬ್ಬಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಎಸ್ಕೆಆರ್ಡಿಪಿ ಕರಾವಳಿ ಪ್ರಾದೇಶಿಕ ವಿಭಾಗದ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷೆ ತಾರಾ ಆಚಾರ್ಯ, ಉಡುಪಿ ದೀಪಜ್ಯೋತಿ ನೆಟ್ವರ್ಕ್ ಅಧ್ಯಕ್ಷ ಸಂತೋಷ್ ಮತ್ತಿತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಬೋರ್ಡ್ ಹೈಸ್ಕೂಲ್ ಆವರಣದಿಂದ ಕೆ.ಎಂ.ಮಾರ್ಗವಾಗಿ ಅಂಬಲಪಾಡಿಯ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಸಭಾಂಗಣದವರೆಗೆ ನಡೆಯುವ ಜಾಥಾ ಕಾರ್ಯಕ್ರಮಕ್ಕೆ ಬೆಳಗ್ಗೆ 9:00 ಗಂಟೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.







