ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ: ಉಡುಪಿ ಡಿಸಿ

ಉಡುಪಿ: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆ ಎನಿಸಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯು ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪಶು ಸಾಕಾಣಿಕೆ ಮಾಡುವವರು ಲಸಿಕೆ ಹಾಕಿಸುವ ಮೂಲತ ತಮ್ಮ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.
ಬುದವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಕಳೆದ ನವೆಂಬರ್ 3ರಿಂದ ಡಿಸೆಂಬರ್ 2ರವರೆಗೆ ಎಲ್ಲಾ ಜಾನುವಾರುಗಳಿಗೆ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕೆ ನೀಡಲಾಗುತ್ತಿದೆ. ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕಟ್ಟೆಚ್ಚರ ವಹಿಸುವುದರೊಂದಿಗೆ ಯಾವುದೇ ಜಾನುವಾರು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.
ಕಳೆದ ಏಳನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 2,05,518 ಜಾನುವಾರುಗಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಇದರಲ್ಲಿ 1,93,496 ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇ.96ರಷ್ಟು ಪ್ರಗತಿ ಸಾಧಿಸಲಾಗಿದೆ. ಇದೀಗ ಎಂಟನೇ ಸುತ್ತಿಗೆ 1,93,496 ಜಾನುವಾರುಗಳಿಗೆ ಲಸಿಕೆಯ ಗುರಿ ನಿಗದಿಯಾಗಿದ್ದು, ಈವರೆಗೆ 88,556 ಜಾನುವಾರುಗಳಿಗೆ ಲಸಿಕೆ ಹಾಕಿಸಲಾಗಿದೆ.ಅಭಿಯಾನದ ಕೊನೆಗೆ ಪ್ರತಿಶತಃ ನೂರರಷ್ಟು ಪ್ರಗತಿಯಾಗಿರಬೇಕು ಎಂದು ಸ್ವರೂಪ ಟಿ.ಕೆ. ಹೇಳಿದ್ದಾರೆ.
ಲಸಿಕಾ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 2,28,350 ಡೋಸ್ ಲಸಿಕೆ ಲಭ್ಯವಿದೆ. ಲಸಿಕಾ ಕಾರ್ಯದ ಸಂದರ್ಭದಲ್ಲಿ ಉತ್ಪತ್ತಿಯಾಗುವ ಜೀವವೈದ್ಯ ತ್ಯಾಜ್ಯ ಗಳನ್ನು ನಿಯಮಾನುಸಾರ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದ ಜಿಲ್ಲಾಧಿಕಾರಿ, ಜಿಲ್ಲೆಯ ಎಲ್ಲಾ ಗ್ರಾಮಗಳ ಜಾನುವಾರುಗಳಿಗೆ ಲಸಿಕಾ ಚುಚ್ಚುಮದ್ದು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು.
ಪಶುವೈದ್ಯರು, ತಾಂತ್ರಿಕ ಸಿಬ್ಬಂದಿ, ಕೆ.ಎಂ.ಎಫ್ ಸಿಬ್ಬಂದಿ, ಮೈತ್ರಿ ಕಾರ್ಯಕರ್ತರು, ಪಶು ಸಖಿಯರು ಹಾಗೂ ಇತರೆ ತರಬೇತಿ ಹೊಂದಿದ ಒಟ್ಟು 268 ಸಿಬ್ಬಂದಿಗಳನ್ನು ಲಸಿಕಾ ಕಾರ್ಯಕ್ಕೆ ನಿಯೋಜಿಸಲಾಗಿದ್ದು, ಇವರುಗಳು ಮನೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಕೇಳಿದ ಮಾಹಿತಿ ಗಳನ್ನೆಲ್ಲಾ ನೀಡಿ ಸಹಕರಿಸುವಂತೆ ಜಿಲ್ಲಾದಿಕಾರಿ ತಿಳಿಸಿದರು.
ಸಭೆಯಲ್ಲಿ ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ, ಮಂಗಳೂರು ಕೆ.ಎಂ.ಎಫ್ ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್, ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲೆಯ ಕಾಪು, ಉಡುಪಿ, ಬೈಂದೂರು, ಹೆಬ್ರಿ, ಕುಂದಾಪುರ, ಕಾರ್ಕಳ ಹಾಗೂ ಬ್ರಹ್ಮಾವರ ತಾಲೂಕು ಮತ್ತು ಉಡುಪಿ ಪಾಲಿಕ್ಲಿನಿಕ್ನಲ್ಲಿ ತಲಾ ಒಂದರಂತೆ ಒಟ್ಟು 8 ಪಶು ಸಂಜೀವಿನಿ ಅಂಬುಲೆನ್ಸ್ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತೀ ಚಿಕಿತ್ಸಾ ಘಟಕದ ವಾಹನದಲ್ಲಿ ಪಶುವೈದ್ಯರು, ಪಶುವೈದ್ಯ ಸಹಾಯಕ ಹಾಗೂ ವಾಹನ ಚಾಲಕರು ನೇಮಕಗೊಂಡಿದ್ದಾರೆ. ಈ ವಾಹನಗಳ ಮೂಲಕ 2025ರ ಜುಲೈನಿಂದ ಸೆಪ್ಟಂಬರ್ವರೆಗೆ ಒಟ್ಟು 4611 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿದೆ.
-ಡಾ.ಎಂ.ಸಿ ರೆಡ್ಡಪ್ಪ, ಉಪನಿರ್ದೇಶಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ.







