ಭಟ್ಕಳದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟದ ಆರೋಪ; 6 ಬಾಲಕರು ಪೊಲೀಸ್ ವಶಕ್ಕೆ
ಪೊಲೀಸ್ ಕ್ರಮ ಪ್ರಶ್ನಿಸಿದ ಸ್ಥಳೀಯರು; ವಿಚಾರಣೆಯ ಬಳಿಕ ಬಿಡುಗಡೆ

ಭಟ್ಕಳ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಆರೋಪದ ಸಂಬಂಧ ಆರು ಮಂದಿ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬುಧವಾರ ರಾತ್ರಿ ಭಟ್ಕಳದಲ್ಲಿ ನಡೆದಿದೆ.
ಬಾಲಕರನ್ನು ವಶಕ್ಕೆ ಪಡೆದಿರುವುದಕ್ಕೆ ಆಧಾರವೇನು ಎಂದು ಸ್ಥಳೀಯರು ಪ್ರಶ್ನಿಸಿದ ಬಳಿಕ ಅವರನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಇದೇ ವೇಳೆ, ಮೆರವಣಿಗೆ ಸಂದರ್ಭದಲ್ಲಿ ಮಸೀದಿಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಜಾಮೀನು ಮಂಜೂರು ಮಾಡಿದ ಬಳಿಕ ಬಿಡುಗಡೆ ಮಾಡಿದ್ದಾರೆ.
ಅಪ್ರಾಪ್ತರನ್ನು ಬಿಡುಗಡೆ ಮಾಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ ಅವರ ಕುಟುಂಬದ ಸದಸ್ಯರು ಹಾಗೂ ಇತರರು ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದರು.
ಸ್ಥಳೀಯರ ಪ್ರಕಾರ, ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಘಟನೆಯ ರಾತ್ರಿ ವಿಚಾರಣೆಗಾಗಿ ಆರಂಭದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.
ಬಳಿಕ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆರು ಬಾಲಕರನ್ನು ವಶಕ್ಕೆ ಪಡೆಯಲಾಗಿತ್ತು. ಅವರ ವಯಸ್ಸು 9, 12, ಇಬ್ಬರ ವಯಸ್ಸಯ 11 ಹಾಗೂ ಮತ್ತಿಬ್ಬರು 14 ವರ್ಷದವರು.
ಬಾಲಕರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬಳಿಕ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಅವರನ್ನು ಕಾರವಾರದ ಬಾಲಾಪರಾಧಿ ನ್ಯಾಯಾಲಯಕ್ಕೆ (Juvenile Court) ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿ, ಬಾಲಕರನ್ನು ವಶಕ್ಕೆ ಪಡೆದಿರುವುದಕ್ಕೆ ಆಧಾರವೇನು ಎಂದು ಪ್ರಶ್ನಿಸಿದರು. ಬಳಿಕ ವಿಷಯವನ್ನು ಪರಿಶೀಲಿಸುವುದಾಗಿ ಪೊಲೀಸರು ತಿಳಿಸಿ ಬಾಲಕರನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ವೀಡಿಯೋ ಆಧರಿಸಿ ಬಂಧನ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವೀಡಿಯೋ ಆಧರಿಸಿ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಗಣೇಶ ವಿಗ್ರಹದ ಮೆರವಣಿಗೆ ಸಾಗುತ್ತಿದ್ದ ವೇಳೆ ಚಿತ್ರೀಕರಿಸಲಾದ ವೀಡಿಯೋದಲ್ಲಿ ರಸ್ತೆಯ ಪಕ್ಕದ ಮನೆಯೊಂದರ ಮೇಲ್ಛಾವಣಿಯಲ್ಲಿ ಬಾಲಕರು ನಿಂತಿರುವುದು ಕಾಣಿಸುತ್ತದೆ.
ಮೇಲ್ಛಾವಣಿಯಿಂದ ಮೆರವಣಿಗೆ ಮೇಲೆ ಕಲ್ಲುಗಳನ್ನು ಎಸೆಯಲಾಗಿದೆ ಎಂದು ವೀಡಿಯೋ ಹಂಚಿಕೊಂಡವರು ಆರೋಪಿಸಿದ್ದರು. ಆದರೆ, ವೀಡಿಯೋದಲ್ಲಿ ಬಾಲಕರು ಕಲ್ಲು ಎಸೆಯುತ್ತಿರುವುದು ಕಂಡುಬಂದಿಲ್ಲ. ಅವರು ಕುಟುಂಬದ ಸದಸ್ಯರೊಂದಿಗೆ ಟೆರೇಸ್ ಮೇಲೆ ನಿಂತು ಮೆರವಣಿಗೆಯನ್ನು ವೀಕ್ಷಿಸುತ್ತಿರುವುದು ಮಾತ್ರ ಕಾಣಿಸುತ್ತದೆ.
ಕಲ್ಲು ತೂರಾಟದ ಘಟನೆಗೆ ಬಾಲಕರಿಗೂ ಯಾವುದೇ ಸಂಬಂಧವಿಲ್ಲ. ಆದರೂ, ಅವರನ್ನು ಆರೋಪಿಗಳನ್ನಾಗಿ ಮಾಡಲು ಪೊಲೀಸರು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಾಲಕರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
"ಇದು ಪೂರ್ವಯೋಜಿತ ಘಟನೆಯಾಗಿತ್ತು. ಅವರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದರು ಮತ್ತು ಅದೇ ಉದ್ದೇಶದಿಂದ ಅಲ್ಲಿಗೆ ಬಂದಿದ್ದರು. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಆದರೆ, ಬಿಜೆಪಿ ನಾಯಕರ ಒತ್ತಡದ ಮೇರೆಗೆ ಆರು ಗಂಟೆಗಳ ಒಳಗೆ ಅವರನ್ನು ಬಿಡುಗಡೆ ಮಾಡಲಾಯಿತು. ಈಗ ನಮ್ಮ ಮೇಲೆ ಆರೋಪ ಹೊರಿಸಿ, ನಮ್ಮ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆಯಲು ಪ್ರಯತ್ನಿಸಲಾಗುತ್ತಿದೆ," ಎಂದು ಕುಟುಂಬದ ಸದಸ್ಯರೊಬ್ಬರು 'ವಾರ್ತಾ ಭಾರತಿ'ಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.
►‘ವಿಚಾರಣೆಗಾಗಿ ಕರೆಸಿದ್ದೆವು’
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ದೀಪನ್ ಎಂ.ಎನ್. ಅವರು, ಅಪ್ರಾಪ್ತರನ್ನು ವಿಚಾರಣೆಗಾಗಿ ಮಾತ್ರ ಪೊಲೀಸ್ ಠಾಣೆಗೆ ಕರೆಸಲಾಗಿತ್ತು ಎಂದು ತಿಳಿಸಿದ್ದಾರೆ.
"ಪೋಷಕರೊಂದಿಗೆ ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಸಿದ್ದೆವು. ವಿಚಾರಣೆ ಮುಗಿದ ಬಳಿಕ ಅವರನ್ನು ಕಳುಹಿಸಿಕೊಟ್ಟೆವು," ಎಂದು ಅವರು 'ವಾರ್ತಾ ಭಾರತಿ'ಗೆ ತಿಳಿಸಿದ್ದಾರೆ.
ಅಪ್ರಾಪ್ತರನ್ನು ವೈದ್ಯಕೀಯ ಪರೀಕ್ಷೆಗೆ ಏಕೆ ಕರೆದೊಯ್ಯಲಾಯಿತು ಎಂಬ ಪ್ರಶ್ನೆಗೆ, "ಕೆಲವು ತಪಾಸಣೆಗಳನ್ನು ನಡೆಸುವ ಸಲುವಾಗಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದೆವು," ಎಂದು ಎಸ್ಪಿ ಪ್ರತಿಕ್ರಿಯಿಸಿದ್ದಾರೆ.






