Bhatkal | ವಿವಾದಿತ ‘ಮುರಿನ ಕಟ್ಟೆ’ ಸ್ಥಳಕ್ಕೆ ಪ್ರವೇಶ ಯತ್ನ: ಗೋವಿಂದ ನಾಯಕ್, ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ವಿವಾದಿತ ‘ಮುರಿನ ಕಟ್ಟೆ’ ವಿಚಾರವಾಗಿ ಭಟ್ಕಳದಲ್ಲಿ ಮಧ್ಯರಾತ್ರಿಯ ಬಳಿಕವೂ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ವಿವಾದಿತ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಗೋವಿಂದ ನಾಯಕ್ ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮೂಲಗಳ ಪ್ರಕಾರ, ಭಾರೀ ಪೊಲೀಸ್ ಬಂದೋಬಸ್ತ್ ನಡುವೆಯೂ ಬಿಜೆಪಿ ಕಾರ್ಯಕರ್ತರು ‘ಮುರಿನ ಕಟ್ಟೆ’ ಸ್ಥಳದ ಬಳಿ ಜಮಾಯಿಸಿ ಒಳಗೆ ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರು ಅವರನ್ನು ತಡೆದರು. ಇದರಿಂದ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ತಿಳಿದು ಬಂದಿದೆ.
ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಎನ್. ದೀಪನ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿ ರಾಮ್ ಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ನಂತರ ಪೊಲೀಸರು ಗೋವಿಂದ ನಾಯಕ್ ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
‘ಮುರಿನ ಕಟ್ಟೆ’ ರಚನೆಯ ಪುನರ್ನಿರ್ಮಾಣ ವಿಚಾರವಾಗಿ ಉದ್ಭವಿಸಿರುವ ವಿವಾದದ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ಮುಂದುವರಿದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ನಡುವೆ, ಹಿರಿಯ ಅಧಿಕಾರಿಗಳು ಸ್ಥಳೀಯ ಮುಖಂಡರು ಹಾಗೂ ವಿವಿಧ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಸಾರ್ವಜನಿಕರು ಶಾಂತಿ ಕಾಪಾಡಬೇಕು ಮತ್ತು ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.






