ವಿಜಯನಗರ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 2,944 ಕೋಟಿ ರೂ. ಬಿಡುಗಡೆ: ಪಿ.ಟಿ.ಪರಮೇಶ್ವರ್

ವಿಜಯನಗರ (ಹೊಸಪೇಟೆ), ಆ.3: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಡಿ ಕಳೆದ ಮೂರು ವರ್ಷಗಳಲ್ಲಿ ವಿಜಯನಗರ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಒಟ್ಟು 2,944 ಕೋಟಿ ರೂ. ಅನುದಾನ ನೇರವಾಗಿ ಬಿಡುಗಡೆ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರಲ್ಲಿ ಸರ್ಕಾರ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜಾರಿಗೊಳಿಸಲಾಗಿದ್ದು, ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳ ಲಾಭ ತಲುಪಿಸುವ ಉದ್ದೇಶದಿಂದ ಅನುಷ್ಠಾನಗೊಳಿಸಲಾಗಿದೆ. ಯೋಜನೆಗಳಲ್ಲಿರುವ ಕೆಲ ಲೋಪಗಳನ್ನು ಸರಿಪಡಿಸಿ ಇನ್ನಷ್ಟು ಪರಿಣಾಮಕಾರಿಯಾಗಿ ಅರ್ಹರಿಗೆ ತಲುಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಸುಮಾರು 3.47 ಲಕ್ಷ ಕುಟುಂಬಗಳಿಗೆ 2023ರ ಆಗಸ್ಟ್ನಿಂದ 2024ರ ಡಿಸೆಂಬರ್ವರೆಗೆ ಡಿಬಿಟಿ ಮೂಲಕ 285 ಕೋಟಿ ರೂ. ಪಾವತಿಸಲಾಗಿದೆ. ನಂತರ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ 3,21,966 ಫಲಾನುಭವಿಗಳಿಗೆ 2023ರ ಜೂನ್ನಿಂದ 2026ರ ಜೂನ್ವರೆಗೆ 468.26 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 2,03,766 ಸ್ಥಾವರಗಳ ಸಮೀಕ್ಷೆ ಗುರಿಯಿದ್ದು, ಇದುವರೆಗೆ 1,35,311 ಸ್ಥಾವರಗಳ ಸಮೀಕ್ಷೆ ನಡೆಸಿ ಶೇ.66.40ರಷ್ಟು ಪ್ರಗತಿ ಸಾಧಿಸಲಾಗಿದೆ. ಮರುಸಮೀಕ್ಷೆ ಮೂಲಕ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸಲಾಗುವುದು ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯ 3,02,017 ನೋಂದಾಯಿತ ಫಲಾನುಭವಿಗಳಿಗೆ 2023ರ ಆಗಸ್ಟ್ನಿಂದ 2026ರ ಮೇವರೆಗೆ 1,727 ಕೋಟಿ ರೂ. ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಜೂನ್ ತಿಂಗಳ 31.38 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದರು.
ರಾಜ್ಯಾದ್ಯಂತ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು 117 ಕೋಟಿ ರೂ. ಪಾವತಿಯಾಗಿದ್ದು, ಇದರಲ್ಲಿ 20 ಕೋಟಿ ರೂ. ವನ್ನು ಈಗಾಗಲೇ ಸರ್ಕಾರದ ಖಜಾನೆಗೆ ಹಿಂದಿರುಗಿಸಲಾಗಿದೆ ಎಂದು ವಿವರಿಸಿದರು.
ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 2026ರ ಜೂನ್ವರೆಗೆ 10.76 ಕೋಟಿ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದು, ಇದಕ್ಕಾಗಿ 430 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅಲ್ಲದೆ, ಸರ್ಕಾರದ ಹೊಸ ಯೋಜನೆಯಡಿ ಬಾಲಕರು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೆ 14,638 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗಿದೆ ಎಂದು ತಿಳಿಸಿದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 12,982 ಮಂದಿ ನೋಂದಾಯಿಸಿಕೊಂಡಿದ್ದು, ಇವರಲ್ಲಿ 12,688 ಪದವೀಧರರು ಹಾಗೂ 294 ಡಿಪ್ಲೊಮಾ ಪದವೀಧರರು ಸೇರಿದ್ದಾರೆ. ಯೋಜನೆಯಡಿ 32.93 ಕೋಟಿ ರೂ. ಸಹಾಯಧನ ವಿತರಿಸಲಾಗಿದೆ. ಆದರೆ ಜಿಲ್ಲೆಯ ಯುವನಿಧಿ ನೋಂದಣಿ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶಿವಮೂರ್ತಿ, ಉಪಾಧ್ಯಕ್ಷರಾದ ಬಡಾವಲಿ, ಹಡಗಲಿ ಶಾಂತನಗೌಡ, ಚಂದ್ರಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ ಉಪಸ್ಥಿತರಿದ್ದರು.






