ಕನ್ನಡ ಉಳಿವಿಗೆ ಬೀದರ್ನಿಂದ ಬೆಂಗಳೂರಿನವರೆಗೆ ಕಾಲ್ನಡಿಗೆ ಜಾಥಾ: ರೂಪೇಶ್ ಪುತ್ತೂರು

ಹರಪನಹಳ್ಳಿ: ಕನ್ನಡ ಶಾಲೆಗಳ ಉಳಿವು, ಕನ್ನಡ ಭಾಷೆಯ ಸಂರಕ್ಷಣೆ ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೀದರ್ನಿಂದ ಬೆಂಗಳೂರಿನವರೆಗೆ ಕಾಲ್ನಡಿಗೆ ಜಾಥಾ ಕೈಗೊಂಡಿದ್ದೇನೆ ಎಂದು ರೂಪೇಶ್ ಪುತ್ತೂರು ತಿಳಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಾದ್ಯಂತ ಕನ್ನಡಿಗರ ಹಕ್ಕುಗಳ ಪರ ಜಾಗೃತಿ ಮೂಡಿಸುವುದು ಹಾಗೂ ಕನ್ನಡ ಭಾಷೆಯ ಮಹತ್ವವನ್ನು ಜನರಿಗೆ ತಲುಪಿಸುವುದು ಜಾಥಾದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡ ಶಾಲೆಗಳು ಮುಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಂಡು ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು ಎಂದು ಆಗ್ರಹಿಸಿದರು.
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಸಮರ್ಪಕ ಉದ್ಯೋಗಾವಕಾಶ ದೊರೆಯುತ್ತಿಲ್ಲ. ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳು ಸ್ಥಳೀಯರಿಗೆ ಆದ್ಯತೆ ನೀಡುವ ಜೊತೆಗೆ ಕನಿಷ್ಠ ಶೇ.70ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡುವಂತೆ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಕಾಲ್ನಡಿಗೆ ಜಾಥಾ ವೇಳೆ ವಿವಿಧ ಜಿಲ್ಲೆಗಳ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಗುತ್ತಿದ್ದು, ಕನ್ನಡ ಭಾಷೆ ಹಾಗೂ ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಸದಸ್ಯರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ಜಾಥಾ ಪೂರ್ಣಗೊಂಡ ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಬೇಡಿಕೆಗಳ ಈಡೇರಿಕೆಗೆ ಮುಂದಿನ ಹಂತದ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಕೀಲ ಬಸವರಾಜ್ ಸಂಗಪ್ಪನವರ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಸ್. ರಾಮಪ್ಪ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಬಿ. ರಾಜಶೇಖರ, ಶಿಕ್ಷಕರಾದ ಕೃಷ್ಣ ನಾಯ್ಕ್, ಅತ್ತವುಲ್ಲಾ, ಅರ್ಜುನ್ ಪರಸ್ಪಪ, ಕೆ. ಮನ್ಸೂರ್ ಅಹ್ಮದ್, ಪದ್ಮರಾಜ್, ಕೆ. ಹನುಮಂತಪ್ಪ, ಟಿ. ಕೊಟ್ರೇಶ್, ಬಿ. ಚಂದ್ರಮೌಳಿ, ಶಿವಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.






