ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷ : ಹಂಪಿಯ ಕಲ್ಲಿನ ರಥ ಸೇರಿ ಪ್ರಮುಖ ತಾಣಗಳಲ್ಲಿ ‘ಪಿಂಕ್ ಲೈಟಿಂಗ್’

ಹೊಸಪೇಟೆ / ವಿಜಯನಗರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆಗೆ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಹಿಳಾ ಸಬಲೀಕರಣದ ಸಂದೇಶ ಸಾರಲು ರಾಜ್ಯದ ಪ್ರಮುಖ ಪ್ರವಾಸಿ ಹಾಗೂ ಐತಿಹಾಸಿಕ ತಾಣಗಳಲ್ಲಿ ಆಗಸ್ಟ್ 30ರಂದು ವಿಶೇಷ ‘ಪಿಂಕ್ ಲೈಟಿಂಗ್’ ವ್ಯವಸ್ಥೆ ಮಾಡಲಾಗಿದೆ.
ಇದರ ಅಂಗವಾಗಿ ವಿಜಯನಗರ ಜಿಲ್ಲೆಯ ಹಂಪಿಯ ಪ್ರಸಿದ್ಧ ಕಲ್ಲಿನ ರಥ ಸೇರಿದಂತೆ ಮೈಸೂರು ಅರಮನೆ, ಚಿತ್ರದುರ್ಗ ಕೋಟೆ, ಉಡುಪಿಯ ಕಾಪು ಲೈಟ್ಹೌಸ್ ಹಾಗೂ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳು ಗುಲಾಬಿ ಬಣ್ಣದ ಬೆಳಕಿನಿಂದ ಕಂಗೊಳಿಸಲಿವೆ.
ಆಗಸ್ಟ್ 30ರಂದು ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ವಿಶೇಷ ಬೆಳಕಿನ ಅಲಂಕಾರವನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ. ಗೃಹಲಕ್ಷ್ಮೀ ಯೋಜನೆಯ ಮಹತ್ವವನ್ನು ಜನರಿಗೆ ಪರಿಚಯಿಸುವುದರ ಜೊತೆಗೆ, ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಗೌರವಯುತ ಬದುಕಿನ ಸಂದೇಶವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಗೃಹಲಕ್ಷ್ಮೀ ಯೋಜನೆಯ ಮೂರು ವರ್ಷಗಳ ಯಶಸ್ವಿ ಪಯಣವನ್ನು ಸ್ಮರಿಸುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ತಾಣಗಳಲ್ಲಿ ನಡೆಯುತ್ತಿರುವ ಈ ಪಿಂಕ್ ಲೈಟಿಂಗ್ ಕಾರ್ಯಕ್ರಮವು ಸಾರ್ವಜನಿಕರ ಗಮನ ಸೆಳೆಯುವಂತಾಗಿದೆ.
ಸಾರ್ವಜನಿಕರು ಈ ವಿಶೇಷ ಪಿಂಕ್ ಲೈಟಿಂಗ್ ಕಾರ್ಯಕ್ರಮವನ್ನು ವೀಕ್ಷಿಸುವ ಮೂಲಕ ಗೃಹಲಕ್ಷ್ಮೀ ಯೋಜನೆಯ ಮೂರು ವರ್ಷಗಳ ಸಂಭ್ರಮದಲ್ಲಿ ಭಾಗಿಯಾಗಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ. ಧನಂಜಯಪ್ಪ ತಿಳಿಸಿದ್ದಾರೆ.






