Harapanahalli | ಧರ್ಮೇಂದ್ರ ಪ್ರಧಾನ್, ಅಮಿತ್ ಷಾ ರಾಜೀನಾಮೆಗೆ ಆಗ್ರಹ

ಹರಪನಹಳ್ಳಿ: ನೀಟ್ ಪರೀಕ್ಷೆ ಅಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ವತಿಯಿಂದ ನಗರದ ಇಜಾರಿ ಶಿರಸಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ನೀಟ್ ಪರೀಕ್ಷೆಯಲ್ಲಿ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೇಶದ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ‘ಸಂಸತ್ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದವು. ಈ ವೇಳೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಬರ್ಬರವಾಗಿ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಹೇಳಿದರು.
ಎಐಎಸ್ಎಫ್ ಸೇರಿದಂತೆ ಎಡಪಂಥೀಯ ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ಜಂತರ್-ಮಂತರ್ನಲ್ಲಿ ನಡೆದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದವು. ಉಚಿತ ಗ್ರಂಥಾಲಯ, ಜಾಗೃತಿ ಕಾರ್ಯಕ್ರಮಗಳು ಹಾಗೂ ಉಪವಾಸ ಸತ್ಯಾಗ್ರಹದ ಮೂಲಕ ವಿದ್ಯಾರ್ಥಿಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ತಮ್ಮ ಹೋರಾಟ ಮುಂದುವರಿಸಿದ್ದರು. ಆದರೆ, ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸುವ ಬದಲು ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತಾಳಿ ಪೊಲೀಸ್ ಬಲಪ್ರಯೋಗದ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಈಡೇರಿಸಬೇಕು. ನೀಟ್ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್, ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ಎಂ. ಸಂತೋಷ್, ತಾಲೂಕು ಕಾರ್ಯದರ್ಶಿ ರಮೇಶನಾಯ್ಕ ಎಚ್., ಜಿಲ್ಲಾ ಕಾರ್ಯಕಾರಿ ಮಂಡಳಿ ಸದಸ್ಯ ಗುಡಿಹಳ್ಳಿ ಹಾಲೇಶ್, ಬಳಿಗಾನೂರು ಕೊಟ್ರೇಶ, ಹೊಸಹಳ್ಳಿ ಮಲ್ಲೇಶ, ರಾಗಿಮಸಲವಾಡ ಹನುಮಂತಪ್ಪ, ಶಿವರಮ್, ಚೌಡಪ್ಪ, ಹನುಮಂತ ನಾಯ್ಕ, ಮುಜೀಬುರ್ ರಹಮಾನ್, ಅರುಣಕುಮಾರ್, ಆಕಾಶ್, ಹನುಮಂತಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.






