Harapanahalli | ಈದ್ ಮಿಲಾದ್: ಪೊಲೀಸ್ ಮಾರ್ಗಸೂಚಿ ಪಾಲಿಸಿ, ಶಾಂತಿಯುತವಾಗಿ ಹಬ್ಬ ಆಚರಿಸಿ : ಎಸ್ಪಿ ಜಾಹ್ನವಿ

ಹರಪನಹಳ್ಳಿ: ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಪೊಲೀಸ್ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಶಾಂತಿ ಹಾಗೂ ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಹೇಳಿದರು.
ನಗರದ ಬಾಬು ಜಗಜೀವನ್ ರಾಮ್ ಸಭಾಂಗಣದಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಹಾಗೂ ಹರಪನಹಳ್ಳಿ ಉಪವಿಭಾಗದ ವತಿಯಿಂದ ಭಾನುವಾರ ಆಯೋಜಿಸಿದ್ದ ಈದ್ ಮಿಲಾದ್ ಹಬ್ಬದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವ ಮುನ್ನ ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಅಗತ್ಯ ಅನುಮತಿ ಪಡೆಯಬೇಕು. ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಬೇಕು. ಡಿಜೆ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಅದನ್ನು ಬಳಸಬಾರದು ಹಾಗೂ ಸುಪ್ರೀಂ ಕೋರ್ಟ್ನ ಆದೇಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಸೂಚಿಸಿದರು.
ಬೈಕ್ ಸವಾರರು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಕರ್ಕಶ ಹಾರ್ನ್ ಅಥವಾ ಅತಿಯಾದ ಶಬ್ದದ ಸೌಂಡ್ ಹಾಕಿಕೊಂಡು ಸಂಚರಿಸಿದರೆ ವಾಹನಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಯಾವುದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾದರೆ ತಕ್ಷಣ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಶಾಂತಿ ಕಾಪಾಡುವಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಡಿವೈಎಸ್ಪಿ ಡಾ. ಸಂತೋಷ್ ಚವ್ಹಾಣ್ ಮಾತನಾಡಿ, ಈದ್ ಮಿಲಾದ್ ಸಂದರ್ಭದಲ್ಲಿ ಅನ್ಯ ಧರ್ಮದವರ ಭಾವನೆಗಳಿಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವುದು ಅಥವಾ ಹಂಚಿಕೊಳ್ಳುವುದು ಕಂಡುಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಗರಸಭೆ ಅಧಿಕಾರಿ ಅಂಬರೀಶ್ ಮಾತನಾಡಿ, ಹಬ್ಬದ ಸಂದರ್ಭದಲ್ಲಿ ನಗರಸಭೆಯಿಂದ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಮುಸ್ಲಿಂ ಸಮಾಜದ ಮುಖಂಡ ವಕೀಲ ಮಾಬು ಸಾಬ್ ಮಾತನಾಡಿ, ಪ್ರತಿವರ್ಷದಂತೆ ಈ ಬಾರಿಯೂ ಹಬ್ಬದ ಆಚರಣೆಗೆ ಪೊಲೀಸರು ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಹೂವಿನಹಡಗಲಿಯಲ್ಲಿ ಈದ್ ಮಿಲಾದ್ ಪ್ರಯುಕ್ತ ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೂ ಪೊಲೀಸ್ ಇಲಾಖೆ ಸಹಕಾರ ನೀಡಬೇಕು ಎಂದು ಈದ್ ಮಿಲಾದ್ ಕಮಿಟಿ ಅಧ್ಯಕ್ಷರು ಮನವಿ ಮಾಡಿದರು.
ಅಂಜುಮಾನ್ ಕಮಿಟಿ ಮಾಜಿ ಅಧ್ಯಕ್ಷ ಜಾಯಾದ್, ಮುಖಂಡರಾದ ಶಿರಾಜವುದ್ದಿನ್, ಖಾಜಿ ಮುಸ್ತಕ್, ಓಂಕಾರಗೌಡ ಸೇರಿದಂತೆ ಸಿಪಿಐ ಮಹಾಂತೇಶ ಜಿ. ಸಜ್ಜನ್, ಹಡಗಲಿ ಸಿಪಿಐ ಮಲ್ಲಪ್ಪ ಹೂಗಾರ, ಪಿಎಸ್ಐಗಳಾದ ಶಂಭುಲಿಂಗ ಸಿ. ಹಿರೇಮಠ, ಎ. ಕಿರಣ್ ಕುಮಾರ್, ವಿಜಯಕೃಷ್ಣ, ಕೆ. ನಾಗರತ್ನ ಹಾಗೂ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಮತ್ತು ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.






