ಹರಪನಹಳ್ಳಿ | ಅರಸೀಕೆರೆ ಹೋಬಳಿ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

ಹರಪನಹಳ್ಳಿ : ಅರಸೀಕೆರೆ ಹೋಬಳಿಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಶುಕ್ರವಾರ ಅರಸೀಕೆರೆ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದವು.
ತಾಲ್ಲೂಕಿನ ಅತಿದೊಡ್ಡ ಹಾಗೂ ಪ್ರತ್ಯೇಕ ತಾಲೂಕು ಕೇಂದ್ರದ ಅರ್ಹತೆ ಹೊಂದಿರುವ ಅರಸೀಕೆರೆ ಹೋಬಳಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ನಲುಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ವಿವಿಧ ತಾಲ್ಲೂಕುಗಳಿಗೆ ಸಂಪರ್ಕ ಕಲ್ಪಿಸುವ ಅರಸೀಕೆರೆ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಇಲ್ಲದಿರುವುದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದರು.
ಹೋಬಳಿ ವ್ಯಾಪ್ತಿಯಲ್ಲಿ 11 ಗ್ರಾಮ ಪಂಚಾಯಿತಿಗಳು ಸೇರಿದ್ದು, ಶಿಕ್ಷಣದ ದೃಷ್ಟಿಯಿಂದ ಪ್ರಮುಖ ಕೇಂದ್ರವಾಗಿದೆ. ಶಾಲೆ, ಪಿಯು ಹಾಗೂ ಪದವಿ ಕಾಲೇಜುಗಳಿದ್ದು, ನಿತ್ಯ ನೂರಾರು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಆದರೆ ಬಾಲಕರಿಗೆ ಮಾತ್ರ ಒಂದು ವಸತಿ ನಿಲಯವಿದ್ದು, ಬಾಲಕಿಯರ ವಸತಿ ನಿಲಯದ ಕೊರತೆಯಿಂದ ವಿದ್ಯಾರ್ಥಿನಿಯರು ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸುವ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ದೂರಿದರು.
ಹೋಬಳಿ ವ್ಯಾಪ್ತಿಯ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ಸಾರಿಗೆ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ನಾಲ್ಕು ವರ್ಷಗಳ ಹಿಂದೆ ಆರಂಭವಾದ ಉಚ್ಚಂಗಿದುರ್ಗ ಗ್ರಾಮದ ಬಸ್ ನಿಲ್ದಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.
ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಅಗತ್ಯ ಚಿಕಿತ್ಸಾ ಸೌಲಭ್ಯಗಳ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದಾರೆ. ಆಂಬ್ಯುಲೆನ್ಸ್ ಸೇವೆಯ ಕೊರತೆಯಿಂದ ಕೆಲವರು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿವೆ ಎಂದು ಹೇಳಿದರು.
ಹೋಬಳಿ ವ್ಯಾಪ್ತಿಯಲ್ಲಿ ನೀರಿನ ಮೂಲಗಳ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದು, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ 105 ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಸಮುದಾಯ ಆರೋಗ್ಯ ಕೇಂದ್ರದಿಂದ ಗಿಲ್ಲಿ ನಗರ ಸರ್ಕಲ್, ಪೊಲೀಸ್ ಠಾಣೆ ಮೂಲಕ ಗುಡಿಹಳ್ಳಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ನೂರಾರು ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೆಲಕಾಲ ರಸ್ತೆ ತಡೆ ನಡೆಸಿದರು.
ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಮಾಜ ಕಲ್ಯಾಣಾಧಿಕಾರಿ ಗಂಗಪ್ಪ, ತಾಲೂಕು ಆರೋಗ್ಯಾಧಿಕಾರಿ ಪೃಥ್ವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್, ಕಬ್ಬಳ್ಳಿ ಮೈಲಪ್ಪ, ಕಬ್ಬಳ್ಳಿ ಡಿ. ನಾಗರಾಜ್, ಬುದಿಹಾಳ್ ಸಿದ್ದಪ್ಪ, ಮಹಾದೇವಪ್ಪ, ಭೀಮಪ್ಪ, ನಿರ್ಮಲಾ ನಂದಿಹಳ್ಳಿ ಮಠ, ಚೂಟಿ ಪ್ರೇಮ, ನಾಗರಾಜ್ ಗೌಡ್ರು, ಎಬಿ ಮಲ್ಲನ ಗೌಡ್ರು, ರಮೇಶ್, ಮಂಜಪ್ಪ, ಮಾರುತಿ, ವಿಶಾಲಮ್ಮ, ರಂಗಪ್ಪ, ಹಾಲಪ್ಪ, ಡಿ. ಅರುಣ್ ಕುಮಾರ್, ಪ್ರಭುಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.







