ಹೊಸಪೇಟೆ | ಝಮೀರ್ ಅಹ್ಮದ್ ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಹೊಸಪೇಟೆ/ವಿಜಯನಗರ : ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಝಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಹಾಗೂ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಧರಣಿ ನಡೆಸಿದರು.
ನಗರದ ಡಾ. ಪುನೀತ್ ರಾಜಕುಮಾರ್ ವೃತ್ತದ ಬಳಿ ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಹಲವಾರು ಕಾಂಗ್ರೆಸ್ ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಭಾಗವಹಿಸಿ ಝಮೀರ್ ಅಹ್ಮದ್ ಖಾನ್ ರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು.
ಝಮೀರ್ ಅಹ್ಮದ್ ಖಾನ್ ಹಿಂದುಳಿದ ವರ್ಗ, ದಲಿತರು ಹಾಗೂ ಅಲ್ಪಸಂಖ್ಯಾತರ ಜನನಾಯಕರಾಗಿದ್ದು, ಮೊದಲ ಸಚಿವ ಸಂಪುಟದಲ್ಲೇ ಅವರಿಗೆ ಡಿಸಿಎಂ ಹುದ್ದೆ ಸೇರಿದಂತೆ ಸಚಿವ ಸ್ಥಾನ ನೀಡಬೇಕಾಗಿತ್ತು ಎಂದು ಧರಣಿನಿರತರು ಅಭಿಪ್ರಾಯಪಟ್ಟರು.
ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಝಮೀರ್ ರಿಗೆ ಆದ್ಯತೆ ಮೇರೆಗೆ ಡಿಸಿಎಂ ಹುದ್ದೆ ಹಾಗೂ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಧರಣಿನಿರತರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು.






