ಹೊಸಪೇಟೆ | ಮುಹಮ್ಮದ್ ಪೈಗಂಬರ್ ಅವರ ʼಸೀರತ್ ಅಭಿಯಾನʼ

ಹೊಸಪೇಟೆ : ಪ್ರವಾದಿ ಮುಹಮ್ಮದ್ (ಸ) ಅವರ ಸಾರ್ವಕಾಲಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕದ ವತಿಯಿಂದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ) ಶೀರ್ಷಿಕೆಯಡಿ ಸೆ.3 ರಿಂದ 14ರ ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಪ್ರವಾದಿ ಮುಹಮ್ಮದ್ (ಸ)ರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ.
ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ಶ್ರೀ ಕೊಟ್ಟುರು ಬಸವಲಿಂಗ ಮಹಾ ಸ್ವಾಮಿಗಳು, ಕೊಟ್ಟುರು ಸ್ವಾಮಿ ಸಂಸ್ಥಾನ ಮಠ ಹೊಸಪೇಟೆ ಇವರಿಂದ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಇತಿಹಾಸ ಪ್ರಾಧ್ಯಾಪಕರಾದ ಡಾ.ಚಂದ್ರಶೇಖರ ಶಾಸ್ತ್ರಿ, ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಸಂಚಾಲಕರಾದ ಕಲೀಮುಲ್ಲಾ ಖಾನ್ ಮನ್ಸೂರಿ, ಜಮಾಅತೆ ಇಸ್ಲಾಮಿ ಹಿಂದ್ ಹೊಸಪೇಟೆ ಅಧ್ಯಕ್ಷರಾದ ಮುಹಮ್ಮದ್ ಅಝೀಝ್ ಮುಲ್ಲಾ, ಕಾರ್ಯಕರ್ತರು ಉಪಸ್ಥಿತರಿದ್ದರು.







