ಹೊಸಪೇಟೆ | ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಪ್ರಗತಿ ಪರಿಶೀಲನಾ ಸಭೆ

ಹೊಸಪೇಟೆ: ರಾಜ್ಯ ಮತ್ತು ದೇಶದಲ್ಲಿ ಪರಿಶಿಷ್ಟ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸವಾಲುಗಳ ಕುರಿತಂತೆ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ-ಪಂಗಡ ವಿಭಾಗದ ಅಧ್ಯಕ್ಷ ಸೋಮಶೇಖರ ಬಣ್ಣದಮನೆ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ನಗರದ ಕೊಂಡನಾಯಕನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನಾ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ದಲಿತ ಸಮುದಾಯದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ, ಸಂವಿಧಾನ ವಿರೋಧಿ ನಡೆಗಳನ್ನು ತೋರಿಸುತ್ತಿದೆ ಎಂದು ಆರೋಪಿಸಿದರು.
ದೇವದಾಸಿ ಮಹಿಳೆಯರ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಸಮುದಾಯದ ನಾಯಕರು ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟರು ಎದುರಿಸುತ್ತಿರುವ ಭೂಮಿ ಹಾಗೂ ಸ್ಮಶಾನ ಸಮಸ್ಯೆಗಳನ್ನು ಉಲ್ಲೇಖಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು.
ಇದಕ್ಕೂ ಮೊದಲು ನಗರದ ಹೃದಯಭಾಗದಲ್ಲಿರುವ ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಯಿತು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಕನ್ನಿರಾಮ್ ರಾಥೋಡ್, ನಾಗರಾಜ್ ನಾಯಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಬಣ್ಣದಮನೆ, ಡಿಸಿಸಿ ಉಪಾಧ್ಯಕ್ಷ ಹಾಲಪ್ಪ, ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಸೇವಾದಳ ಜಿಲ್ಲಾ ಅಧ್ಯಕ್ಷ ಮಾರಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಮಂಜುನಾಥ್, ನಾಗರಾಜ್, ಕನ್ನೇಶ್ವರ, ಹರಪನಹಳ್ಳಿ ಮಲ್ಲೇಶ್, ಕೊಟ್ರೇಶ್, ದುರ್ಗೇಶ್ ವಕೀಲರು, ಮಂಜಪ್ಪ ಹಾಗೂ ಅನೇಕ ನಾಯಕರು ಪಾಲ್ಗೊಂಡಿದ್ದರು.







