ಕೂಡ್ಲಿಗಿ | 870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕೂಡ್ಲಿಗಿ ನ9: ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಶ್ಲಾಘಿಸಿದರು.
ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ ಎಂದರು.
ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ ಕ್ಷೇತ್ರಕ್ಕೆ 1,750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರಕಾರದ ಗ್ಯಾರಂಟಿಗಳು ತಲುಪುತ್ತಿವೆ. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದರು.
ಎರಡು ವರ್ಷದಲ್ಲಿ ನಮ್ಮ ಸರಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದೆ. ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ ಎಂದು ಹೇಳಿದರು.
FRP ಮತ್ತು MSP ಎರಡನ್ನೂ ನಿಗದಿ ಮಾಡುವುದು ಕೇಂದ್ರದ ಬಿಜೆಪಿ ಸರಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ, ವಿಜಯೇಂದ್ರ ತಮ್ಮದೇ ಕೇಂದ್ರ ಸರಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡುವ ಕೆಲಸ ಮಾಡಿದೆ ಎಂದು ತಿಳಿಸಿದರು.







