ಕೊಟ್ಟೂರು–ಕೂಡ್ಲಿಗಿ ಶೀಘ್ರವೇ ಬರಪೀಡಿತ ತಾಲೂಕು ಘೋಷಣೆ : ಶಾಸಕ ಶ್ರೀನಿವಾಸ್

ವಿಜಯನಗರ/ಕೊಟ್ಟೂರು–ಕೂಡ್ಲಿಗಿ : ಮಳೆ ಕೊರತೆ ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಪ್ರತಿಕೂಲ ಪರಿಣಾಮದ ಹಿನ್ನೆಲೆಯಲ್ಲಿ ಕೊಟ್ಟೂರು ಮತ್ತು ಕೂಡ್ಲಿಗಿ ತಾಲೂಕುಗಳನ್ನು ಶೀಘ್ರದಲ್ಲೇ ಬರಪೀಡಿತ ತಾಲೂಕುಗಳೆಂದು ಘೋಷಿಸುವುದು ಶತಸಿದ್ಧ ಎಂದು ಶಾಸಕ ಶ್ರೀನಿವಾಸ್ ಭರವಸೆ ನೀಡಿದ್ದಾರೆ.
ಕೊಟ್ಟೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಎರಡೂ ತಾಲೂಕುಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಮಾಡಿದ ಬೆಳೆಗಳಿಗೆ ಸಮರ್ಪಕ ಮಳೆ ದೊರೆಯದೆ ಬೆಳೆಗಳ ಬೆಳವಣಿಗೆ ಕುಂಠಿತವಾಗಿದ್ದು, ಹಲವು ಪ್ರದೇಶಗಳಲ್ಲಿ ಬರದ ಛಾಯೆ ಆವರಿಸಿದೆ ಎಂದು ಹೇಳಿದರು.
ಮಳೆ ಕೊರತೆಯಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಎರಡೂ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ರೈತರು ಹಾಗೂ ವಿವಿಧ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿದ ಸರ್ಕಾರ ಬರಪೀಡಿತ ತಾಲೂಕು ಘೋಷಣೆ ಮಾಡುವ ದಿಸೆಯಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ಕೊಟ್ಟೂರು ಮತ್ತು ಕೂಡ್ಲಿಗಿ ತಾಲೂಕುಗಳಲ್ಲಿನ ಮಳೆ ಕೊರತೆ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ರೈತರ ಹಿತದೃಷ್ಟಿಯಿಂದ ಬರಪೀಡಿತ ತಾಲೂಕು ಘೋಷಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ, ರೈತರಿಗೆ ದೊರೆಯಬೇಕಾದ ಪರಿಹಾರ ಮತ್ತು ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಶ್ರೀನಿವಾಸ್ ಹೇಳಿದರು.
ಬರಪೀಡಿತ ತಾಲೂಕು ಘೋಷಣೆಯಾದರೆ ರೈತರಿಗೆ ಬೆಳೆಹಾನಿ ಪರಿಹಾರ, ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರುಗಳಿಗೆ ಮೇವು ಸೇರಿದಂತೆ ವಿವಿಧ ಬರ ಪರಿಹಾರ ಕ್ರಮಗಳು ದೊರೆಯುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.






