ಹಂಪಿ, ಮೈಸೂರು, ಲಕ್ಕುಂಡಿ ತಾಣಗಳ ಅಭಿವೃದ್ಧಿಗೆ ಬೃಹತ್ ಯೋಜನೆ : ಸಚಿವ ಕೆ.ಜೆ.ಜಾರ್ಜ್

ವಿಜಯನಗರ (ಹೊಸಪೇಟೆ) : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 50 ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಯೋಜನೆಯಡಿ ಕರ್ನಾಟಕದ ಹಂಪಿ, ಮೈಸೂರು ಹಾಗೂ ಲಕ್ಕುಂಡಿ ತಾಣಗಳನ್ನು ವಿಶ್ವಮಟ್ಟದ ಪ್ರವಾಸಿ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಬೆಳವಣಿಗೆಗೆ ಖಾಸಗಿ ಸಹಭಾಗಿತ್ವ ಅತ್ಯಗತ್ಯ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಹೊಸ ಮಲಪನಗುಡಿಯ ಹೆರಿಟೇಜ್ ರೆಸಾರ್ಟ್ನಲ್ಲಿ ಮಂಗಳವಾರ ನಡೆದ ಗ್ಲೋಬಲ್ ಡೆಸ್ಟಿನೇಷನ್ ಡೆವಲಪ್ಮೆಂಟ್ ಯೋಜನೆ ಕುರಿತ ರಾಜ್ಯಮಟ್ಟದ ಸಮಾಲೋಚನಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಅದನ್ನು ಭಾರತದ ಪ್ರಮುಖ ಪ್ರವಾಸಿ ಆಕರ್ಷಣೆಯನ್ನಾಗಿ ರೂಪಿಸಲಾಗುವುದು ಎಂದರು.
ಮೈಸೂರು ನಗರವನ್ನು ಇನ್ನಷ್ಟು ಆಧುನಿಕ ಪ್ರವಾಸಿ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಕಲ್ಯಾಣಿ ಚಾಲುಕ್ಯರ ವೈಭವವನ್ನು ಹೊಂದಿರುವ ಲಕ್ಕುಂಡಿ ತಾಣವನ್ನು ಭವಿಷ್ಯದ ಪ್ರಮುಖ ಸಾಂಸ್ಕೃತಿಕ ಪ್ರವಾಸಿ ಕೇಂದ್ರವನ್ನಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಂಪಿ ಸೇರಿದಂತೆ ಪ್ರಮುಖ ಪಾರಂಪರಿಕ ತಾಣಗಳಲ್ಲಿ ವಿವಿಧ ಇಲಾಖೆಗಳ ನಡುವಿನ ಸಮನ್ವಯಕ್ಕಾಗಿ ಡೆಸ್ಟಿನೇಶನ್ ಮ್ಯಾನೇಜ್ಮೆಂಟ್ ಆರ್ಗನೈಸೇಶನ್ (DMO) ರಚಿಸುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ. ಇದರಿಂದ ಆಡಳಿತಾತ್ಮಕ ವಿಳಂಬ ಕಡಿಮೆಯಾಗಿ ಹೂಡಿಕೆದಾರರು ಹಾಗೂ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಹೊಸಪೇಟೆ-ಬಳ್ಳಾರಿ ಭಾಗದ ಜಿಂದಾಲ್ ವಿಮಾನ ನಿಲ್ದಾಣದ ರನ್ವೇ ವಿಸ್ತರಣೆ ಹಾಗೂ ಹಂಪಿಗೆ ದೇಶದ ಪ್ರಮುಖ ನಗರಗಳಿಂದ ಹೆಚ್ಚಿನ ರೈಲು ಸಂಪರ್ಕ ಕಲ್ಪಿಸಲು ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಶಾಸಕ ಹೆಚ್.ಆರ್. ಗವಿಯಪ್ಪ ಮಾತನಾಡಿ, ಹಂಪಿಯ 1,200ಕ್ಕೂ ಅಧಿಕ ಸ್ಮಾರಕಗಳನ್ನು ಸಂಪರ್ಕಿಸುವ 15.4 ಕಿ.ಮೀ. ಹೆರಿಟೇಜ್ ವಾಕ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಂಪಿ ಸ್ಮಾರಕಗಳ ಡಿಜಿಟಲ್ ಸಂರಕ್ಷಣೆ, ಹಂಪಿ ಹಾಗೂ ಬಳ್ಳಾರಿ ರೈಲು ನಿಲ್ದಾಣಗಳ ಪಾರಂಪರಿಕ ಅಭಿವೃದ್ಧಿ, ಕಮಲಾಪುರ ಕೆರೆಯ ಸೌಂದರ್ಯೀಕರಣ, ಅಂತಾರಾಷ್ಟ್ರೀಯ ಮಟ್ಟದ ಇಂಟರ್ಪ್ರಿಟೇಷನ್ ಸೆಂಟರ್ ಹಾಗೂ ಪ್ರವಾಸೋದ್ಯಮ ಕಾಲೇಜು ಸ್ಥಾಪನೆಗೂ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ, ಹೂಡಿಕೆದಾರರನ್ನು ಆಕರ್ಷಿಸಲು ಸಿಂಗಲ್ ವಿಂಡೋ ವ್ಯವಸ್ಥೆ ಜಾರಿಯಾಗಬೇಕು. ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಗಳನ್ನು ಆರಂಭಿಸಬೇಕು. ಹಂಪಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರು, ನೈರ್ಮಲ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.






