ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಮಾಹಿತಿ ಹಕ್ಕು ವೇದಿಕೆ ಒತ್ತಾಯ

ಕೊಟ್ಟೂರು: (ವಿಜಯನಗರ) ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ಕೊಟ್ಟೂರು ಮತ್ತು ಕೂಡ್ಲಿಗಿ ತಾಲೂಕುಗಳು ತೀವ್ರ ಬರ ಪರಿಸ್ಥಿತಿಗೆ ಸಿಲುಕಿದ್ದು, ಕೂಡಲೇ ಎರಡೂ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ರೈತರಿಗೆ ಬೆಳೆಹಾನಿ ಪರಿಹಾರ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಆಗ್ರಹಿಸಿದೆ.
ಈ ಕುರಿತು ವೇದಿಕೆಯ ರಾಜ್ಯಾಧ್ಯಕ್ಷ ಹಾಗೂ ವಿಜಯನಗರ ಜಿಲ್ಲಾಧ್ಯಕ್ಷ ರಾಜು ಗೌಡ ನೇತೃತ್ವದಲ್ಲಿ ಜಿಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಗುರುವಾರ ಕೊಟ್ಟೂರು ತಹಶೀಲ್ದಾರರ ಕಚೇರಿಗೆ ಮನವಿ ಸಲ್ಲಿಸಿದರು.
ಮಳೆ ಕೊರತೆಯಿಂದ ರೈತರು ಬಿತ್ತನೆ ಮಾಡಿದ್ದ ಪ್ರಮುಖ ಬೆಳೆಗಳು ಒಣಗಿ ಹೋಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಕೃಷಿಯನ್ನೇ ಅವಲಂಬಿಸಿರುವ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಹಲವು ಗ್ರಾಮಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯೂ ತೀವ್ರವಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಬರ ಘೋಷಣೆಯಲ್ಲಿ ವಿಳಂಬ ಮಾಡುತ್ತಿರುವುದು ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸುತ್ತಿದೆ ಎಂದು ವೇದಿಕೆ ಆರೋಪಿಸಿದೆ.
ವಿಂಡ್ಮಿಲ್, ಸೋಲಾರ್ ಕಂಪನಿಗಳ ವಿರುದ್ಧ ಆಕ್ರೋಶ:
ತಾಲೂಕಿನ ವಿವಿಧ ಭಾಗಗಳಲ್ಲಿ ಜಮೀನುಗಳನ್ನು ಲೀಸ್ಗೆ ಪಡೆದು ಅಥವಾ ಖರೀದಿಸಿ ವಿಂಡ್ಮಿಲ್ ಹಾಗೂ ಸೋಲಾರ್ ಯೋಜನೆಗಳನ್ನು ನಡೆಸುತ್ತಿರುವ ಕೆಲವು ಕಂಪನಿಗಳು ರೈತರ ಹಕ್ಕುಗಳಿಗೆ ಧಕ್ಕೆ ತರುತ್ತಿವೆ ಎಂದು ವೇದಿಕೆ ದೂರಿದೆ.
ಒಪ್ಪಂದದಲ್ಲಿ ನಿಗದಿಪಡಿಸಿದ ಮೊತ್ತವನ್ನು ರೈತರಿಗೆ ಸಮರ್ಪಕವಾಗಿ ಪಾವತಿಸದಿರುವುದು, ಒಪ್ಪಂದಕ್ಕಿಂತ ಹೆಚ್ಚಿನ ಜಮೀನನ್ನು ಬಳಸಿಕೊಳ್ಳುವುದು, ಭಾರೀ ಯಂತ್ರೋಪಕರಣಗಳ ಸಂಚಾರದಿಂದ ಬಂಡಿದಾರಿಗಳು ಹಾಗೂ ಪಕ್ಕದ ಜಮೀನುಗಳ ಬೆಳೆಗಳಿಗೆ ಹಾನಿಯಾಗುತ್ತಿರುವುದು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಯೋಜನೆ ಆರಂಭಿಸುವ ಸಂದರ್ಭದಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರೂ ಅದನ್ನು ಸಮರ್ಪಕವಾಗಿ ಈಡೇರಿಸಿಲ್ಲ. ಹೀಗಾಗಿ ಕಂಪನಿಗಳ ಒಪ್ಪಂದಗಳನ್ನು ಮರುಪರಿಶೀಲಿಸಿ, ರೈತರಿಗೆ ಬಾಕಿ ಇರುವ ಲೀಸ್ ಹಣವನ್ನು ಕೊಡಿಸಬೇಕು. ರೈತರ ಅನುಮತಿ ಇಲ್ಲದೆ ಜಮೀನು ಬಳಸಿಕೊಂಡಿದ್ದರೆ ಅಂತಹ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಸಾಲ ವಸೂಲಾತಿ ತಡೆಗೆ ಆಗ್ರಹ
ಬರದಿಂದ ತೀವ್ರ ಸಂಕಷ್ಟದಲ್ಲಿರುವ ರೈತರ ಸಹಕಾರಿ ಸಂಘಗಳು ಹಾಗೂ ಬ್ಯಾಂಕ್ಗಳ ಸಾಲ ವಸೂಲಾತಿಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ರೈತರ ಸಾಲ ಮತ್ತು ಬಡ್ಡಿ ಮನ್ನಾ ಮಾಡುವ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಒತ್ತಾಯಿಸಿದೆ.
ಗುಳೆ ತಪ್ಪಿಸಲು 200 ದಿನ ಕೆಲಸ ನೀಡಿ
ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗದ ಕೊರತೆಯಿಂದ ಕೃಷಿ ಕಾರ್ಮಿಕರು ಗುಳೆ ಹೋಗುವುದನ್ನು ತಡೆಯಲು VB-GRAM-G ಯೋಜನೆಯಡಿ ಕನಿಷ್ಠ 200 ದಿನಗಳ ಕೆಲಸ ಒದಗಿಸಬೇಕು. ಜೊತೆಗೆ ಕೂಲಿ ಮೊತ್ತವನ್ನೂ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದರೊಂದಿಗೆ ತಾಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಿ, ಗ್ರಾಮೀಣ ಜನರ ಬದುಕಿನ ಮೇಲೆ ದುಷ್ಪರಿಣಾಮ ಬೀರುತ್ತಿರುವ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಒತ್ತಾಯಿಸಿದೆ.
ಕೊಟ್ಟೂರು ಮತ್ತು ಕೂಡ್ಲಿಗಿ ತಾಲೂಕುಗಳನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ, ಬೆಳೆಹಾನಿ ಪರಿಹಾರ, ಕುಡಿಯುವ ನೀರು, ಜಾನುವಾರುಗಳಿಗೆ ನೀರು–ಮೇವು ಹಾಗೂ ರೈತರಿಗೆ ಅಗತ್ಯ ಸರ್ಕಾರಿ ನೆರವು ಒದಗಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ವೇದಿಕೆಯ ಎ ಬಿ ನಾಗರಾಜ್ ಗೌಡ, ಎಚ್ ಎಂ ಬಸವರಾಜ್, ಮಾರಪ್ಪ, ಸಿದ್ದೇಶ್, ಅಮರೇಶ್, ಮುಗಪ್ಪ, ರಾಜಭಕ್ಷಿ, ಶಿವಪುತ್ರಪ್ಪ, ವೀರಪ್ಪ ಹಾಗೂ ಸರ್ವ ಸದಸ್ಯರು ಎಚ್ಚರಿಕೆ ನೀಡಿದೆ.






