ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸಿರಾಜ್ ಶೇಖ್ ಪುನರಾಯ್ಕೆ

ಹೊಸಪೇಟೆ/ವಿಜಯನಗರ: ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಮಾಜಿ ಶಾಸಕ ಸಿರಾಜ್ ಶೇಖ್ ಅವರನ್ನು ಮತ್ತೊಮ್ಮೆ ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
ಜಿಲ್ಲೆ ರಚನೆಯಾದಾಗಿನಿಂದಲೇ ಕಾಂಗ್ರೆಸ್ ಸಂಘಟನೆಯ ನೇತೃತ್ವ ವಹಿಸಿಕೊಂಡಿರುವ ಸಿರಾಜ್ ಶೇಖ್ ಅವರಿಗೆ ಸತತ ಎರಡನೇ ಅವಧಿಗೂ ಅಧ್ಯಕ್ಷ ಸ್ಥಾನ ನೀಡಿ ಪಕ್ಷದ ವರಿಷ್ಠರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ರಾಜಕೀಯ ವಲಯದಲ್ಲಿ ಸಕ್ರಿಯವಾಗಿರುವ ಅವರು ಕೆಪಿಸಿಸಿ ನಾಯಕರು ಹಾಗೂ ಹೈಕಮಾಂಡ್ನೊಂದಿಗೆ ಉತ್ತಮ ಸಮನ್ವಯ ಹೊಂದಿರುವುದು ಮರುನೇಮಕಾತಿಗೆ ಪ್ರಮುಖ ಕಾರಣ ಎನ್ನಲಾಗಿದೆ.
ಈ ಬಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಲವು ಆಕಾಂಕ್ಷಿಗಳು ಪೈಪೋಟಿ ನಡೆಸಿದ್ದರೂ, ಅಂತಿಮವಾಗಿ ಸಿರಾಜ್ ಶೇಖ್ ಅವರನ್ನೇ ಆಯ್ಕೆ ಮಾಡಲಾಗಿದೆ. ಈ ಮೂಲಕ ವಿಜಯನಗರ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಮತ್ತೆ ಅವರ ಹೆಗಲೇರಿದೆ.
ಮಾಜಿ ಶಾಸಕರಾಗಿ ರಾಜಕೀಯ ಅನುಭವ ಹೊಂದಿರುವ ಸಿರಾಜ್ ಶೇಖ್ ಜಿಲ್ಲೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಮರುನೇಮಕಾತಿಯಿಂದ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಸಿರಾಜ್ ಶೇಖ್ ಅವರ ಮುಂದಿರುವ ಪ್ರಮುಖ ಸವಾಲಾಗಿದೆ.






