ವಿಜಯನಗರ | ಸ್ವಾವಲಂಬಿ ಬದುಕು ನಿರ್ಮಾಣಕ್ಕೆ ಸಹಕಾರ ಸಂಸ್ಥೆಗಳು ಪೂರಕ : ಎಂ.ಪಿ.ಲತಾ ಮಲ್ಲಿಕಾರ್ಜುನ್

ವಿಜಯನಗರ (ಹೊಸಪೇಟೆ) : ಸಂಸ್ಥೆಗಳ ತತ್ವಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಿ, ಲಕ್ಷಾಂತರ ಕುಟುಂಬಗಳಿಗೆ ಸ್ವಾವಲಂಬನೆಯ ಬದುಕನ್ನು ನೀಡುವಲ್ಲಿ ಸಹಕಾರ ಸಂಸ್ಥೆಗಳು ಪೂರಕವಾಗಿವೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಹಾಗೂ ಹರಪನಹಳ್ಳಿ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.
ನಗರದ ಸುರಭಿ ಕಲ್ಯಾಣ ಮಂಟಪದ ಎಂ.ಪಿ.ರವೀಂದ್ರ ವೇದಿಕೆಯಲ್ಲಿ ರಾಜ್ಯ ಸಹಕಾರಿ ಮಂಡಳಿ, ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್, ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಸಪೇಟೆ, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟ, ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಅವಳಿ ಜಿಲ್ಲೆಯ ಎಲ್ಲಾ ವರ್ಗದ ಸಹಕಾರಿ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು.
ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗೆ ಸಹಕಾರ ಸಂಸ್ಥೆಗಳು ಬಹುಮುಖ್ಯ ಪಾತ್ರವನ್ನು ವಹಿಸಲಿವೆ. ಈಗಾಗಲೇ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಿದ್ದಾರೆ. ಜತೆಗೆ ಸಹಕಾರ ಸಂಸ್ಥೆಗಳಲ್ಲಿ ಭಾಗವಹಿಸುವ ಮೂಲಕ ಇನ್ನಷ್ಟು ಸಧೃಡಗೊಳ್ಳಬಹುದಾಗಿದೆ. ಈ ಬಾರಿಯ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಧ್ಯೇಯ ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಘಗಳು’ ಎಂಬುದಾಗಿದೆ. ಸಹಕಾರ ಸಂಸ್ಥೆಗಳು ದೇಶವನ್ನು ಆರ್ಥಿಕವಾಗಿ ಸದೃಢವಾಗಿಸುವುದರ ಜತೆಗೆ ಕೃಷಿ, ಹಾಲು, ವಸತಿ, ಕೈಗಾರಿಕೆ, ಬ್ಯಾಂಕಿಂಗ್ ಮತ್ತು ಸೇವಾ ವಲಯದಲ್ಲಿ ಕ್ಷಿಪ್ರ ಸಾಧನೆಯನ್ನು ಮಾಡುತ್ತಿವೆ. ಸಂಸ್ಥೆಗಳು ಪಾರದರ್ಶಕತೆ ಮತ್ತು ನಿಷ್ಠೆಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಿದ್ದರಿಂದ ಪ್ರಸ್ತುತದಲ್ಲಿ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದರು.
ಹೊಸಪೇಟೆ ಬಿಡಿಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಕೆ.ತಿಪ್ಪೇಸ್ವಾಮಿ ಮಾತನಾಡಿದರು.
ಇದೇ ವೇಳೆ ವೇದಿಕೆಯಲ್ಲಿ ಸಹಕಾರ ಸಪ್ತಾಹದ ನಿಮಿತ್ತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ‘ಸಹಕಾರ ಪತ್ರಿಕೆ’ಯ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಹಕಾರ ಕ್ಷೇತ್ರದಲ್ಲಿ ಸಾಧನೆಗೈದ ವಿವಿಧ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಈ ವೇಳೆ ಬಿಡಿಸಿಸಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಟಿ.ಎಂ.ಚಂದ್ರಶೇಖರಯ್ಯ, ಚೊಕ್ಕ ಬಸವನಗೌಡ್ರು, ಬಿಡಿಸಿಸಿ ಬ್ಯಾಂಕ್ನ ನಿರ್ದೇಶಕರಾದ ಹುಲುಗಪ್ಪ, ವಿಶ್ವನಾಥ, ಮೂಕಯ್ಯಸ್ವಾಮಿ, ಅಕ್ಕಿ ಬಸವರಾಜ, ಅಪೆಕ್ಸ್ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿ ದೇವರಾಜ್, ರಾಬಕೊ ಮತ್ತು ವಿಜಯನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಸತ್ಯನಾರಾಯಣ ನೆಕ್ಕಂಟಿ, ಹೊಸಪೇಟೆ ಬಿಡಿಸಿಸಿ ಬ್ಯಾಂಕ್ನ ಉಪಾಧ್ಯಕ್ಷ ಐ.ದಾರುಕೇಶ್, ಕೆಓಫ್ನ ಉಪಾಧ್ಯಕ್ಷ ಸೂಗನಗೌಡ, ಸೇರಿದಂತೆ ಅಪೆಕ್ಸ್ ಬ್ಯಾಂಕ್ನ ಅಧಿಕಾರಿಗಳು ಮತ್ತು ರೈತರು, ಸಾರ್ವಜನಿಕರು ಭಾಗವಹಿಸಿದ್ದರು.







