ವಿಜಯನಗರ | ಸಾಮಾಜಿಕ ಅಸಮಾನತೆ ತೊಲಗಿಸಲು ಶ್ರಮಿಸಿದ ಧೀಮಂತ ನಾಯಕ ಡಿ.ದೇವರಾಜು ಅರಸು : ಡಿಸಿ ಎಂ.ಎಸ್.ದಿವಾಕರ್

ವಿಜಯನಗರ (ಹೊಸಪೇಟೆ) : ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜನಕ ಡಿ.ದೇವರಾಜ ಅರಸು ಅವರು ಸಾಮಾಜಿಕ ಸಮಾನತೆ ತರುವಲ್ಲಿ ಶ್ರಮಿಸಿದ ಧೀಮಂತ ನಾಯಕರು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜ ಅರಸು ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏರ್ಪಡಿಸಿದ್ದ ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆಯ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಬುಧವಾರ ಮಾತನಾಡಿದರು.
ಉಳುವವನೆ ಭೂಮಿಯ ಒಡೆಯ ಕಾಯ್ದೆ ರಾಜ್ಯದ ಹಲವು ಜನರಿಗೆ ಭೂ ಒಡೆತನದ ಹಕ್ಕು ನೀಡಿತು. ನಿರುದ್ಯೋಗಿಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮಗಳನ್ನು ರೂಪಿಸಿ ಸಾವಿರಾರು ಯುವಜನರಿಗೆ ನೆರವಾದರು. ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಮತ್ತು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಗೌರವ ದೊರಕಿಸುವ ನಿಟ್ಟಿನಲ್ಲಿ ಅವರು ಹಲವಾರು ಯೋಜನೆಯಗಳನ್ನು ಜಾರಿಗೆ ತಂದರು. ಜೀತ ಪದ್ದತಿ, ಮಲಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ್ದಾರೆ ಎಂದರು.
ಹಗರಿಬೊಮ್ಮನಹಳ್ಳಿಯ ಗಂಗಾವತಿ ಭೀಮಪ್ಪನವರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಗೂಳೆಪ್ಪ ಹುಲ್ಮನಿ ಉಪನ್ಯಾಸಕರಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲಾ ಮಟ್ಟದಲ್ಲಿ ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ, ಕ್ರೀಡಾ ಸ್ಪರ್ದೆ, ಚರ್ಚಾ ಗೋಷ್ಠಿಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಬಳಿಕ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿಸಲಾಯಿತು.
ಈ ವೇಳೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿ.ಶಶಿಕಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಜಾವೀದ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸದ್ದರು.







