ವಿಜಯನಗರ | ರಸ್ತೆ ಅಪಘಾತಗಳನ್ನು ತಪ್ಪಿಸಲು ರಸ್ತೆತಡೆಗಳನ್ನು ಅಳವಡಿಸಿ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್

ವಿಜಯನಗರ(ಹೊಸಪೇಟೆ) : ಜಿಲ್ಲಾ ವ್ಯಾಪ್ತಿಯ ನಗರ ಮತ್ತು ಪಟ್ಟಣಗಳ ರಸ್ತೆಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸಲು ರಸ್ತೆ ತಡೆಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಪಿಡಬ್ಲೂಡಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಟ್ಟಣಗಳಲ್ಲಿ ವೇಗವಾಗಿ ವಾಹನಗಳನ್ನು ಚಲಾಯಿಸುತ್ತಿರುವ ಅನೇಕ ದೂರುಗಳು ಬಂದ ಹಿನ್ನಲೆಯಲ್ಲಿ ವೇಗ ನಿಯಂತ್ರಣಕ್ಕೆ ಸಣ್ಣ ರಸ್ತೆ ತಡೆಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಮಾತನಾಡಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಯಾವುದೇ ರಸ್ತೆಗಳಲ್ಲಿ ರಸ್ತೆತಡೆಗಳನ್ನು ಅಳವಡಿಸುವ ಮುನ್ನ ಆಯಾ ವೃತ್ತ ನಿರೀಕ್ಷಕರ ಸಲಹೆ ಪಡೆದುಕೊಳ್ಳಬೇಕು. ಹೊಸಪೇಟೆ ನಗರದ ಮುಖ್ಯ ವೃತ್ತಗಳಲ್ಲಿ ಸಿಗ್ನಲ್ ಬೋರ್ಡ್ ಮತ್ತು ರಸ್ತೆತಡೆಗಳನ್ನು ಆಳವಡಿಸಬೇಕು ಎಂದರು.
ಸಭೆಯಲ್ಲಿ ಸಾರಿಗೆ ಇಲಾಖೆ, ಪಿಡಬ್ಲೂಡಿ, ಎನ್ಎಚ್ಎಐ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.





