ವಿಜಯನಗರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಜಾಗೃತಿ ವೇದಿಕೆಯಿಂದ ತಹಶೀಲ್ದಾರ್ ಗೆ ಮನವಿ

ಹರಪನಹಳ್ಳಿ: ಕನ್ನಡಿಗರ ಹಿತಾಸಕ್ತಿ ಹಾಗೂ ರಾಜ್ಯದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಕನ್ನಡ ಜಾಗೃತಿ ವೇದಿಕೆಯ ವಿಜಯನಗರ ಜಿಲ್ಲಾಧ್ಯಕ್ಷೆ ಜಿ.ಈರಮ್ಮ ಮಾತನಾಡಿ ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ತಡೆಯಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಹಾಗೂ ಮೇಕೆದಾಟು ಯೋಜನೆಯನ್ನು ಶೀಘ್ರ ಆರಂಭಿಸಬೇಕು, ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಬೇಕು, ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಂಡು ಅದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಅವುಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಶಿಕ್ಷಕರನ್ನು ಒದಗಿಸಿ ಉಳಿಸಬೇಕು, ಐಸಿಎಸ್ಇ, ಸಿಬಿಎಸ್ಇ ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬೇಕು. ಅಕ್ರಮ ವಲಸಿಗರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಖಾಸಗಿ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಚಿರಂಜೀವಿ ಕೋಸಂಬಿ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಗಂಗಮ್ಮ ಹಿರೇಮಠ, ಭೋವಿ ನಾಗಮ್ಮ, ನಿರ್ಮಲಮ್ಮ ಸೇರಿದಂತೆ ಇತರರು ಇದ್ದರು.






