Vijayanagar | ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಾಸಕ ಗವಿಯಪ್ಪ

ಹೊಸಪೇಟೆ/ವಿಜಯನಗರ: ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಆರ್.ಗವಿಯಪ್ಪ ಅವರು ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದ ಆಡಿಟೋರಿಯಂ ಹಾಲ್ನಲ್ಲಿ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ “ಪ್ರಗತಿ ಪರಿಶೀಲನೆ ಸಭೆ” ನಡೆಸಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.
ಸಭೆಯಲ್ಲಿ ಪಿಡಬ್ಲ್ಯೂಡಿ, ಆರ್ಡಿಪಿಆರ್, ಲ್ಯಾಂಡ್ ಆರ್ಮಿ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳ ಮಾಹಿತಿ ನೀಡಿದರು. ಇದೇ ವೇಳೆ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಬಂದಿರುವ ಅನುದಾನವನ್ನು ಯಾವ ಯಾವ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುತ್ತಿದೆ ಎಂಬುದರ ಕುರಿತು ಶಾಸಕರು ವಿವರಿಸಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆ, ಡಿಎಂಎಫ್ ಅನುದಾನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅನುದಾನ, ಮುಖ್ಯಮಂತ್ರಿ ವಿಶೇಷ ಅನುದಾನ ಹಾಗೂ ಶಾಸಕರ ಅನುದಾನ ಸೇರಿದಂತೆ ವಿವಿಧ ಮೂಲಗಳಿಂದ ಬಂದಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಹೊಸಪೇಟೆ ನಗರದ ವಿವಿಧ ವಾರ್ಡ್ಗಳ ಅಭಿವೃದ್ಧಿಗಾಗಿ ಸುಮಾರು 3,523.92 ಲಕ್ಷ ರೂ. ಹಾಗೂ ಕಮಲಾಪುರ ಪಟ್ಟಣ ಪಂಚಾಯಿತಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸುಮಾರು 700 ಲಕ್ಷ ರೂ. ಅನುದಾನ ಮೀಸಲಿರಿಸಲಾಗಿದೆ. ಈ ಅನುದಾನವನ್ನು ರಸ್ತೆ ಅಭಿವೃದ್ಧಿ, ಶೌಚಾಲಯ ನಿರ್ಮಾಣ, ಡ್ರೈನೇಜ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದು ತಿಳಿಸಿದರು.
“ಹೊಸಪೇಟೆ ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದೆ. ಸಾರ್ವಜನಿಕರು ಹಾಗೂ ಅಧಿಕಾರಿಗಳು ಕೈಜೋಡಿಸಿದರೆ ಇನ್ನಷ್ಟು ವೇಗವಾಗಿ ಅಭಿವೃದ್ಧಿ ಸಾಧ್ಯ” ಎಂದು ಶಾಸಕರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಸಾರ್ವಜನಿಕರು, ನಗರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ತಮ್ಮ ಸಮಸ್ಯೆಗಳು ಮತ್ತು ಅಭಿಪ್ರಾಯಗಳನ್ನು ಶಾಸಕರ ಮುಂದಿಟ್ಟರು. ಎಲ್ಲರ ಅಭಿಪ್ರಾಯಗಳನ್ನು ಆಲಿಸಿದ ಶಾಸಕರು, ಜನಪರ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಸಿ ವಿವೇಕಾನಂದ ಪಿ., ಯೋಜನಾ ನಿರ್ದೇಶಕ ಮನೋಹರ್, ಪೌರಾಯುಕ್ತ ಶಿವಕುಮಾರ್, ಇಒ ಆಲಂಬಾಷಾ, ಎಇಇ ಸೈಯದ್ ಮನ್ಸೂರ್ ಅಹ್ಮದ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






