ವಿಜಯನಗರ | ತಾಯಿ, ಶಿಶು ಮರಣ ನಿಯಂತ್ರಣಕ್ಕೆ ಸೂಕ್ತ ಕ್ರಮವಹಿಸಿ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಜಿಲ್ಲಾ ವ್ಯಾಪ್ತಿಯ ಎಲ್ಲಾ ಆಸ್ಪತ್ರೆಗಳಲ್ಲಿ ತಾಯಿ ಮತ್ತು ಶಿಶು ಮರಣ ಪ್ರಕರಣಗಳು ಹೆಚ್ಚಳವಾಗದಂತೆ ವೈದ್ಯಾಧಿಕಾರಿಗಳು ಸೂಕ್ತ ಕ್ರಮವಹಿಸಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ತಾಯಂದಿರ, ಶಿಶು ಮತ್ತು ಮಕ್ಕಳ ಮರಣ ಲೆಕ್ಕಪರಿಶೋಧನೆ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಅವರು ಮಾತನಾಡಿದರು.
ಎಲ್ಲಾ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಆರೋಗ್ಯ ಕೇಂದ್ರದಲ್ಲಿದ್ದು, ರೋಗಿಗಳ ತಪಾಸಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ತಾಯಂದಿರು ಮತ್ತು ಶಿಶು, ಮಕ್ಕಳ ಸಾವು ಪ್ರಕರಣಗಳು ಹೆಚ್ಚಾಗದಂತೆ ಸೂಕ್ತ ಕ್ರಮ ವಹಿಸಲು ಜಿಲ್ಲಾಕೇಂದ್ರದಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಎಲ್ಲಾ ವೈದ್ಯಾಧಿಕಾರಿಗಳು ಜಿಲ್ಲಾ ಮತ್ತು ತಾಲೂಕು ಮಟ್ಟದ ಸಭೆಗಳನ್ನು ಪ್ರತಿ ಶನಿವಾರ ಆಯೋಜಿಸಿ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಚಿಸಿದರು.
ಈ ವಿಚಾರದಲ್ಲಿ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಲ್ಲಿ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರನಾಯ್ಕ, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಜಿಲ್ಲಾ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ಡಾ.ಭಾಸ್ಕರ್, ಡಾ.ರಾಧಿಕಾ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.







