Vijayanagara | ಎಸ್ಐಆರ್ ಕಾರ್ಯದಲ್ಲಿ ಶೇ.100 ಸಾಧನೆ: ಬಿಎಲ್ಒಗಳಿಗೆ ಜಿಲ್ಲಾಧಿಕಾರಿಯಿಂದ ಪ್ರಶಂಸನಾ ಪತ್ರ

ವಿಜಯನಗರ (ಹೊಸಪೇಟೆ), ಜು.10: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ–2026 (ಎಸ್ಐಆರ್) ಕಾರ್ಯದಲ್ಲಿ ಕಡಿಮೆ ಅವಧಿಯಲ್ಲಿ ಶೇ.100ರಷ್ಟು ಗಣತಿ ನಮೂನೆಗಳನ್ನು ಅರ್ಹ ಮತದಾರರಿಗೆ ವಿತರಿಸಿ, ಡಿಜಿಟಲೀಕರಣ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಹಾಗೂ ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಮಹತ್ವದ ಕಾರ್ಯವನ್ನು ಕೇವಲ 10 ದಿನಗಳಲ್ಲಿ ಸಮರ್ಪಕವಾಗಿ ಪೂರ್ಣಗೊಳಿಸಿರುವ ಅಧಿಕಾರಿಗಳ ಕರ್ತವ್ಯನಿಷ್ಠೆ ಹಾಗೂ ಕಾರ್ಯಕ್ಷಮತೆ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
90 ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಅಂಗವಾಗಿ ಅರ್ಹ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸುವುದು, ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ಬಿಎಲ್ಒ ಆ್ಯಪ್ ಮೂಲಕ ಡಿಜಿಟಲೀಕರಣಗೊಳಿಸುವ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿದ ಪಾಪಿನಾಯಕನಹಳ್ಳಿ ಕಂದಾಯ ಗ್ರಾಮದ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕ ಹಾಗೂ ಗ್ರಾಮ ಆಡಳಿತಾಧಿಕಾರಿ ವಿನೋದ ಕುಂಬಾರ್, ಕುಂಟಗಲ್ಲಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಶ್ವಿನಿ ಜಿ.ಕೆ., ಪಾಪಿನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶಿಲ್ಪಕಲಾ, ಸೀತಾರಾಮ ತಾಂಡ ಕಂದಾಯ ಗ್ರಾಮದ ಮತಗಟ್ಟೆ ಅಧಿಕಾರಿಗಳ ಮೇಲ್ವಿಚಾರಕ ಹಾಗೂ ಗ್ರಾಮ ಆಡಳಿತಾಧಿಕಾರಿ ಗಂಗಾಧರ ಸೇರಿದಂತೆ ಬಿಎಲ್ಒಗಳು ಮತ್ತು ಮೇಲ್ವಿಚಾರಕರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಈ. ಬಾಲಕೃಷ್ಣ, ಉಪವಿಭಾಗಾಧಿಕಾರಿ ಪಿ. ವಿವೇಕಾನಂದ, ತಹಶೀಲ್ದಾರ್ ಶೃತಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.






