Vijayanagara | ಗಣೇಶೋತ್ಸವ ಸರಳವಾಗಿ ಆಚರಿಸಿ, ಸರ್ಕಾರದ ನಿಯಮ ಪಾಲಿಸಿ : ಡಿವೈಎಸ್ಪಿ ಮಲ್ಲೇಶ ದೊಡ್ಮನಿ

ಕೊಟ್ಟೂರು (ವಿಜಯನಗರ): ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿ, ಆದರೆ ಸರ್ಕಾರದ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಡಿವೈಎಸ್ಪಿ ಮಲ್ಲೇಶ ದೊಡ್ಮನಿ ಹೇಳಿದರು.
ವಿಜಯನಗರ ಜಿಲ್ಲಾ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಗಣೇಶೋತ್ಸವದ ಪೂರ್ವಭಾವಿ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆ ವೇಳೆ ಕಾನೂನು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಿದರು.
ಬ್ಯಾನರ್ ಹಾಗೂ ಫ್ಲೆಕ್ಸ್ಗಳನ್ನು ಅಗತ್ಯ ಅನುಮತಿ ಪಡೆದು ಮಾತ್ರ ಅಳವಡಿಸಬೇಕು. ರಸ್ತೆ ಸಂಚಾರಕ್ಕೆ ಅಥವಾ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಹಾಗೂ ಪಟ್ಟಣದ ಸೌಂದರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಬ್ಯಾನರ್ಗಳನ್ನು ಹಾಕಬಾರದು ಎಂದು ತಿಳಿಸಿದರು.
ಗಣೇಶ ಮೆರವಣಿಗೆ ವೇಳೆ ವಿದ್ಯುತ್ ತಂತಿಗಳು, ಶಿಥಿಲಗೊಂಡಿರುವ ವಿದ್ಯುತ್ ಕಂಬಗಳು ಹಾಗೂ ಇತರೆ ಅಪಾಯಕಾರಿ ಸ್ಥಳಗಳ ಬಗ್ಗೆ ವಿಶೇಷ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಒಂದು ಕ್ಷಣದ ನಿರ್ಲಕ್ಷ್ಯ ಸಂಭ್ರಮವನ್ನು ದುರಂತವನ್ನಾಗಿಸಬಾರದು. ಬೆಂಕಿ ಹಾಗೂ ವಿದ್ಯುತ್ ಅವಘಡ ತಡೆಯುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.
ಮಳೆ ಕೊರತೆ ಹಾಗೂ ಜನರು ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿ ಆಚರಣೆಗಿಂತ ಸರಳ ಮತ್ತು ಸಾಂಕೇತಿಕ ಗಣೇಶೋತ್ಸವಕ್ಕೆ ಆದ್ಯತೆ ನೀಡುವಂತೆ ಸಾರ್ವಜನಿಕರು ಮತ್ತು ಗಣೇಶ ಮಂಡಳಿಗಳಿಗೆ ಮನವಿ ಮಾಡಿದರು.
ಗಣೇಶೋತ್ಸವವನ್ನು ಶಾಂತಿ, ಸುರಕ್ಷತೆ ಮತ್ತು ಸೌಹಾರ್ದತೆಯಿಂದ ಯಶಸ್ವಿಗೊಳಿಸಲು ಯುವಕ ಮಂಡಳಿಗಳು, ಗಣೇಶೋತ್ಸವ ಸಮಿತಿಗಳು, ಗ್ರಾಮಸ್ಥರು ಹಾಗೂ ಮುಖಂಡರು ಪೊಲೀಸ್ ಮತ್ತು ಕಂದಾಯ ಇಲಾಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಅಮರೇಶ್ ಜಿ.ಕೆ., ತಾಪಂ ಇಒ ಡಾ. ಆನಂದಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ದುರ್ಗಪ್ಪ ಡಿ., ಪಿಎಸ್ಐ ಗೀತಾಂಜಲಿ ಶಿಂಧೆ, ಎಎಸ್ಐ ಮಹಾಬಲೇಶ ಸೇರಿದಂತೆ ಪೊಲೀಸ್ ಸಿಬ್ಬಂದಿ, ವಿವಿಧ ಗ್ರಾಮಗಳ ಯುವಕರು, ಮುಖಂಡರು ಹಾಗೂ ಗಣೇಶ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.






