Vijayanagara | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಡಿಸಿ ಕವಿತಾ ಮನ್ನಿಕೇರಿ ಸೂಚನೆ

ವಿಜಯನಗರ(ಹೊಸಪೇಟೆ : ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ವಲಯಗಳಿಂದ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಯಾವುದೇ ಪ್ರಮುಖ ಗೊಂದಲಗಳಿಲ್ಲ. ಆದಾಗ್ಯೂ ಕೆಲವೆಡೆ ಕಾಮಗಾರಿ ವಿಳಂಬವಾಗುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಹೆದ್ದಾರಿ ನಿರ್ಮಾಣ ಪ್ರದೇಶಗಳಲ್ಲಿ ಸಮರ್ಪಕ ಸರ್ವಿಸ್ ರಸ್ತೆಗಳ ಕೊರತೆ ಹಾಗೂ ಅವೈಜ್ಞಾನಿಕ ಸಂಪರ್ಕ ರಸ್ತೆಗಳ ಕಾರಣದಿಂದ ಅಪಘಾತಗಳು ಸಂಭವಿಸುತ್ತಿರುವ ಕುರಿತು ದೂರುಗಳು ಬಂದಿವೆ. ಇಂತಹ ಸ್ಥಳಗಳನ್ನು ಗುರುತಿಸಿ ಅಗತ್ಯ ತಿದ್ದುಪಡಿ ಕ್ರಮ ಕೈಗೊಳ್ಳಬೇಕು. ಸೂಚನಾ ಫಲಕ, ಬ್ಯಾರಿಕೇಡ್, ರಾತ್ರಿ ವೇಳೆ ಎಚ್ಚರಿಕೆ ಬ್ಲಿಂಕರ್ ಹಾಗೂ ಸೌರ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಅಲ್ಲದೆ ವೈಜ್ಞಾನಿಕ ರೀತಿಯಲ್ಲಿ ಸರ್ವಿಸ್ ರಸ್ತೆ ಹಾಗೂ ಅಂಡರ್ಪಾಸ್ಗಳನ್ನು ನಿರ್ಮಿಸಬೇಕು ಎಂದು ತಾಕೀತು ಮಾಡಿದರು.
ಡಣಾಪುರ ವ್ಯಾಪ್ತಿಯ ಒಂದು ಹಾಗೂ ಆಲೂರು ಸಮೀಪದ ಎರಡು ಸೇರಿದಂತೆ ಒಟ್ಟು ಮೂರು ಪ್ರಮುಖ ಸೇತುವೆಗಳ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಮಲಾಪುರ ಮತ್ತು ವೆಂಕಟಾಪುರ ಸುತ್ತಮುತ್ತ ಕಳೆದ ಆರು ತಿಂಗಳಲ್ಲಿ ಮೂರು ಚಿರತೆಗಳು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವುದನ್ನು ಉಲ್ಲೇಖಿಸಿದ ಜಿಲ್ಲಾಧಿಕಾರಿಗಳು, ವನ್ಯಜೀವಿಗಳ ಸಂರಕ್ಷಣೆಗಾಗಿ ಹೆದ್ದಾರಿ ಮಾರ್ಗಗಳಲ್ಲಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಸೂಚಿಸಿದರು.
ಕಾಮಗಾರಿಗಾಗಿ ಕಡಿಯಲಾದ ಮರಗಳಿಗೆ ಪರ್ಯಾಯವಾಗಿ ಹೆದ್ದಾರಿಯ ಇಕ್ಕೆಲಗಳಲ್ಲಿ ಹೊಸ ಗಿಡಗಳನ್ನು ಕಡ್ಡಾಯವಾಗಿ ನೆಟ್ಟು ಅವುಗಳನ್ನು ಸಂರಕ್ಷಿಸಬೇಕು ಎಂದು ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದರು. ಈ ಕುರಿತು ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿವೈಎಸ್ಪಿ ಪಿ. ಮುರಳೀಧರ, ಉಪ ವಿಭಾಗಾಧಿಕಾರಿ ವಿವೇಕಾನಂದ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಉಪಸ್ಥಿತರಿದ್ದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿವೈಎಸ್ಪಿ ಪಿ.ಮುರಳೀಧರ, ಉಪ ವಿಭಾಗಾಧಿಕಾರಿ ವಿವೇಕಾನಂದ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಹಾಗೂ ಗುತ್ತಿಗೆದಾರರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.






