Vijayanagara | ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಪಣ ತೊಡಿ: ಡಿಎಚ್ಒ ಡಾ.ಎಲ್.ಆರ್. ಶಂಕರ್ ನಾಯ್ಕ್ ಕರೆ

ವಿಜಯನಗರ (ಹೊಸಪೇಟೆ): ತಂಬಾಕು ಸೇವನೆಯು ಕೇವಲ ಒಬ್ಬ ವ್ಯಕ್ತಿಯ ಆರೋಗ್ಯ ಹಾಳುಗೆಡವುದಲ್ಲದೆ, ಇಡೀ ಕುಟುಂಬ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಸಂಕಷ್ಟಕ್ಕೆ ಸಿಲುಕಿ ಬೀದಿಪಾಲು ಮಾಡುತ್ತದೆ. ಆದ್ದರಿಂದ ಜಿಲ್ಲೆಯನ್ನು ಸಂಪೂರ್ಣ ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ ಕರೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಮುಂಭಾಗದಲ್ಲಿ ಸೋಮವಾರ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಆಕರ್ಷಣೆಯನ್ನು ಬಹಿರಂಗಪಡಿಸುವುದು - ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ದೇಶದಲ್ಲಿ 1987 ರಲ್ಲೇ ಕಾನೂನು ಜಾರಿಗೆ ಬಂದಿದ್ದರೂ, ಅದರ ಕಟ್ಟುನಿಟ್ಟಾದ ಅನುಷ್ಠಾನ ಇಂದಿನ ಅಗತ್ಯವಾಗಿದೆ. ವಿಶ್ವದಲ್ಲೇ ಟರ್ಕಿ ಮತ್ತು ಬ್ರೆಝಿಲ್ ದೇಶಗಳು ಕೋಟ್ಪಾ ನಿಯಮಗಳನ್ನು ಅತ್ಯಂತ ಕಠಿಣವಾಗಿ ಜಾರಿಗೊಳಿಸುವ ಮೂಲಕ ಸಂಪೂರ್ಣ ತಂಬಾಕು ಮುಕ್ತ ದೇಶಗಳಾಗಿ ಹೊರಹೊಮ್ಮಿವೆ. ಅಲ್ಲಿ ತಂಬಾಕಿನ ಉತ್ಪಾದನೆ, ಮಾರಾಟ ಮತ್ತು ಸೇವನೆಗೆ ಕಠಿಣ ನಿಷೇಧವಿದೆ. ಅದೇ ಮಾದರಿಯನ್ನು ನಮ್ಮಲ್ಲೂ ಅಳವಡಿಸಿಕೊಳ್ಳಬೇಕಿದೆ ಎಂದರು.
ದೇಶದಲ್ಲಿ ಪ್ರಸ್ತುತ ಸುಮಾರು 80 ಲಕ್ಷ ಕ್ಯಾನ್ಸರ್ ಪ್ರಕರಣಗಳಿದ್ದು, ಅದರಲ್ಲಿ 70 ಲಕ್ಷ ಪುರುಷರು ಹಾಗೂ 10 ಲಕ್ಷ ಮಹಿಳೆಯರು ಈ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ಪ್ರತಿ ವರ್ಷ ಸುಮಾರು 200 ರಿಂದ 250 ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ.
ಪ್ರಮುಖವಾಗಿ ಇಂದಿನ ಯುವ ಪೀಳಿಗೆ ಹಾಗೂ ಶ್ರಮಿಕ ವರ್ಗದವರಲ್ಲಿ ಬಾಯಿ ಕ್ಯಾನ್ಸರ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿದ್ದು, ರೋಗ ಉಲ್ಬಣಗೊಂಡು ಅನೇಕ ಯುವಕರಿಗೆ ಬಾಯಿ ತೆರೆಯಲು ಸಾಧ್ಯವಾಗದಂತಹ ದಾರುಣ ಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಯುವ ಪೀಳಿಗೆಯನ್ನು ಈ ತಂಬಾಕು ವ್ಯಸನದಿಂದ ಸಂಪೂರ್ಣ ಮುಕ್ತಗೊಳಿಸಬೇಕಿದೆ. ಇದು ಕೇವಲ ಆರೋಗ್ಯ ಇಲಾಖೆಯೊಂದರ ಜವಾಬ್ದಾರಿಯಲ್ಲ. ಸರ್ಕಾರದ ಎಲ್ಲಾ ಇಲಾಖೆಗಳು, ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಕೈಜೋಡಿಸಿದಾಗ ಮಾತ್ರ ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಆಶಯ ವ್ಯಕ್ತಪಡಿಸಿದರು.
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೃಹತ್ ಜನ ಜಾಗೃತಿ ಜಾಥ ಕಾರ್ಯಕ್ರಮ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಅರೋಗ್ಯ ನಿರೀಕ್ಷಣಾಧಿಕಾರಿ ಎಂ ಧರ್ಮನಗೌಡ ತಂಬಾಕು ನಿಯಂತ್ರಣ ಕುರಿತು ಪ್ರತಿಜ್ಞಾವಿಧಿ ಭೋದಿಸಿದರು.
ಈ ವೇಳೆ ಜಿಲ್ಲಾ ಆರ್ಸಿಎಚ್ ಅಧಿಕಾರಿ ಜಂಬಯ್ಯ, ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಕುಟುಂಬ ಕಲ್ಯಾಣಾಧಿಕಾರಿ ಡಾ.ವಿನಯ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನೋದ್, ಕುಷ್ಟರೋಗ ರೋಗ ನಿಯಂತ್ರಣಾಧಿಕಾರಿ ಡಾ.ರಾಧಿಕಾ, ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣದೇವರಾಯುಲು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಶ್ರೀಪತಿ ನರ್ಸಿಂಗ್ ಕಾಲೇಜು ಮತ್ತು ಟಿ.ಎಮ್.ಇ.ಎ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಇದ್ದರು.






