Vijayanagara | ಕೂಡ್ಲಿಗಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಜಾಗೃತಿ ಜಾಥಾ

ವಿಜಯನಗರ/ಕೂಡ್ಲಿಗಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಸಭೆಯ ಅಂಗವಾಗಿ ಕೂಡ್ಲಿಗಿಯಲ್ಲಿ ಮಂಗಳವಾರ ಬೃಹತ್ ಜಾಗೃತಿ ಜಾಥಾ ನಡೆಸಲಾಯಿತು.
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಜಾಥಾದ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಪೌರಪ್ರಜ್ಞೆಯ ಕುರಿತು ಯುವಜನರಲ್ಲಿ ಅರಿವು ಮೂಡಿಸಲಾಯಿತು.
ಜಾಥಾಕ್ಕೆ ತಾಲ್ಲೂಕು ದಂಡಾಧಿಕಾರಿ (ತಹಸೀಲ್ದಾರ್) ಕುಮಾರಿ ನೇತ್ರಾವತಿ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹೆಚ್. ದಾದಾಪೀರ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಜಿ. ಹೊನ್ನೂರಪ್ಪ, ಕಾರ್ಯದರ್ಶಿ ಸಿ.ವಿರೂಪಾಕ್ಷಪ್ಪ, ಜಂಟಿ ಕಾರ್ಯದರ್ಶಿ ಡಿ.ಎಚ್.ದುರ್ಗೇಶ್, ಮುಖಂಡರಾದ ಎಚ್.ಕೃಷ್ಣಪ್ಪ, ಬಂಡೆ ರಾಘವೇಂದ್ರ, ಎಚ್.ಬಸಪ್ಪ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.




