Vijayanagara | ಅಪಘಾತ ಪ್ರಮಾಣ ಶೂನ್ಯಕ್ಕೆ ತರುವ ಗುರಿಯೊಂದಿಗೆ ಅಧಿಕಾರಿಗಳು ಕಾರ್ಯನಿರ್ವಹಿಸಲಿ : ಡಿಸಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ): ಜಿಲ್ಲೆಯಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ವಿವಿಧ ಕಾರಣಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಪಘಾತ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುವ ಬ್ಲ್ಯಾಕ್ ಸ್ಪಾಟ್ಗಳನ್ನು ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ ಜಂಟಿಯಾಗಿ ಗುರುತಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಗುರುತಿಸಲಾದ ಅಪಘಾತ ವಲಯಗಳಲ್ಲಿ ವೈಜ್ಞಾನಿಕ ರೀತಿಯ ರಸ್ತೆ ಉಬ್ಬುಗಳು, ಸೂಚನಾ ಫಲಕಗಳು, ರಿಫ್ಲೆಕ್ಟರ್ಗಳು ಹಾಗೂ ರಾತ್ರಿ ವೇಳೆ ಎಚ್ಚರಿಕೆ ನೀಡುವ ಸೋಲಾರ್ ಬ್ಲಿಂಕರ್ ದೀಪಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಲಘು ವಾಹನ ಚಾಲಕರು ಸೀಟ್ ಬೆಲ್ಟ್ ಧರಿಸುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅಪ್ರಾಪ್ತ ವಯಸ್ಕರಿಗೆ ವಾಹನ ನೀಡುವ ಪೋಷಕರ ವಿರುದ್ಧ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹೆದ್ದಾರಿ ಹಾಗೂ ಪ್ರಮುಖ ರಸ್ತೆ ಬದಿಯ ಶಾಲಾ-ಕಾಲೇಜುಗಳ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜೀಬ್ರಾ ಕ್ರಾಸಿಂಗ್ಗಳು ಮತ್ತು ವೇಗ ನಿಯಂತ್ರಕ ಹಂಪ್ಗಳನ್ನು ಅಳವಡಿಸಬೇಕು. ಹೆದ್ದಾರಿ ಬದಿಯಲ್ಲಿ ಅನಧಿಕೃತವಾಗಿ ಲಾರಿ ಹಾಗೂ ಭಾರಿ ವಾಹನಗಳನ್ನು ನಿಲ್ಲಿಸುವುದರಿಂದ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ವಾಹನಗಳ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ರಸ್ತೆ ಬದಿಯ ಅನಧಿಕೃತ ಫ್ಲೆಕ್ಸ್, ಜಾಹೀರಾತು ಫಲಕಗಳು ಹಾಗೂ ದೃಷ್ಟಿ ಅಡ್ಡಿಪಡಿಸುವ ಗಿಡಗಂಟಿಗಳನ್ನು ತೆರವುಗೊಳಿಸಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಅಗತ್ಯವಿರುವ ಕಡೆಗಳಲ್ಲಿ ಮೇಲ್ಸೇತುವೆ ಹಾಗೂ ಸ್ಕೈವಾಕ್ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಅಪಘಾತ ಸಂಭವಿಸಿದ ಬಳಿಕದ ಮೊದಲ ಒಂದು ಗಂಟೆ ಅತ್ಯಂತ ಮಹತ್ವದ್ದಾಗಿರುವುದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ 24×7 ಆಂಬುಲೆನ್ಸ್ ಸೇವೆ ಲಭ್ಯವಿರಬೇಕು. ಅಪಘಾತದ ಮಾಹಿತಿ ಸಿಕ್ಕ ತಕ್ಷಣ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಇರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಕೆಲವು ಹೆದ್ದಾರಿಗಳಲ್ಲಿ ಬೀದಿ ದೀಪಗಳು ಹಾಗೂ ಸಿಸಿಟಿವಿ ಕ್ಯಾಮೆರಾಗಳ ಕೊರತೆ ಕುರಿತು ದೂರುಗಳು ಬಂದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಅಗತ್ಯವಿರುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬೀದಿ ದೀಪಗಳ ಸಮಸ್ಯೆಯನ್ನೂ ಶೀಘ್ರ ಪರಿಹರಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಮಾತನಾಡಿ, ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಪಘಾತ ಪ್ರದೇಶಗಳ ಪರಿಶೀಲನೆ ನಡೆಸಿ ಒಂದೇ ಸ್ಥಳದಲ್ಲಿ ಪುನರಾವರ್ತಿತವಾಗುವ ಅಪಘಾತಗಳನ್ನು ಅಪಘಾತ ವಲಯಗಳಾಗಿ ಗುರುತಿಸಲಾಗಿದೆ. ಅಪಘಾತಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಸಂಬಂಧಿತ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಹೇಮರಾಜ್, ಜೂನಿಯರ್ ಇಂಜಿನಿಯರ್ ಮಂಜುನಾಥ್, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು






