Vijayanagara | ಪ್ರಜಾಸೇವಾ ಆಂದೋಲನ ಯಶಸ್ವಿಗೆ ಪೂರ್ವಭಾವಿ ಸಭೆ

ವಿಜಯನಗರ/ಕೂಡ್ಲಿಗಿ: ಕ್ಷೇತ್ರದಲ್ಲಿ ಸೆ.5ರಂದು ನಡೆಯಲಿರುವ ಪ್ರಜಾಸೇವಾ ಆಂದೋಲನದ ಯಶಸ್ವಿ ಆಯೋಜನೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರ ಪ್ರಮುಖ ಪೂರ್ವಭಾವಿ ಸಭೆ ಇಂದು ನಗರದ ಶಾಸಕರ ಕಚೇರಿಯಲ್ಲಿ ನಡೆಯಿತು.
ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾದ ಈ ಆಂದೋಲನವು ಸಮಾಜದ ಕೊನೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಮಹತ್ವದ ಕಾರ್ಯಕ್ರಮವಾಗಿದೆ ಎಂದು ವಿವರಿಸಿದರು.
‘ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು’ ಎಂದೇ ಕರೆಯಲ್ಪಡುವ ಕೂಡ್ಲಿಗಿ ತಾಲೂಕು ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಕ್ಷೇತ್ರದ ಜನತೆಗೆ ಹೆಮ್ಮೆಯ ಸಂಗತಿ ಎಂದು ಅವರು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮವು ಪಕ್ಷ, ಜಾತಿ, ವರ್ಗದ ಭೇದವಿಲ್ಲದೆ ಎಲ್ಲಾ ನಾಗರಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮತ್ತು ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಸಿಕ್ಕಿರುವ ಅಪೂರ್ವ ಅವಕಾಶವಾಗಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಶಾಸಕ ಡಾ. ಶ್ರೀನಿವಾಸ್ ಅವರು ಕೂಡ್ಲಿಗಿ ಮತ್ತು ಕೊಟ್ಟೂರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಸಲ್ಲಿಸಿದರು. ಮಳೆ ಕೊರತೆಯಿಂದ ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಗಮನ ಸೆಳೆದ ಅವರು, ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಕುರಿ ಶಿವಮೂರ್ತಿ, ತಮ್ಮಣ್ಣ ಎನ್.ಟಿ., ಮರಳುಸಿದ್ಧನಗೌಡ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.
ಅಲ್ಲದೆ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ಯಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ಅಲಿ ಅಕ್ರಂ ಷಾ, ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.






