Vijayanagara | ಸೋನಮ್ ವಾಂಗ್ಚುಕ್ ಬಂಧನ ಖಂಡಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ

ಹೊಸಪೇಟೆ/ವಿಜಯನಗರ: ಲಡಾಖ್ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಆರಂಭಕ್ಕೂ ಮುನ್ನವೇ ಹೋರಾಟದ ನೇತೃತ್ವ ವಹಿಸಿದ್ದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಆಕ್ರೋಶಕ್ಕೆ ಕಾರಣವಾಯಿತು.
ವಿಜಯನಗರ ಕಾಲೇಜು ಎದುರು ಸೇರಿದ್ದ ಪ್ರತಿಭಟನಾಕಾರರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರಮುಖ ಮುಖಂಡ ಸೋಮಶೇಖರ ಬಣ್ಣದ ಮನೆ ಸೇರಿದಂತೆ ಕೆಲವರನ್ನು ವಶಕ್ಕೆ ಪಡೆದರು. ಇದನ್ನು ಖಂಡಿಸಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, “ನಮ್ಮನ್ನೂ ಬಂಧಿಸಿ, ಇಲ್ಲವೇ ಬಂಧಿತ ಮುಖಂಡರನ್ನು ಕೂಡಲೇ ಬಿಡುಗಡೆಗೊಳಿಸಿ” ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನೇ ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ದೆಹಲಿಯಲ್ಲಿ ನಡೆದ ರೀತಿಯನ್ನೇ ರಾಜ್ಯದಲ್ಲಿಯೂ ಅನುಸರಿಸಲಾಗುತ್ತಿದೆ ಎಂದು ಸರ್ಕಾರದ ಕ್ರಮವನ್ನು ಟೀಕಿಸಿದರು.
ಬಳಿಕ ಬಂಧಿತ ಮುಖಂಡ ಸೋಮಶೇಖರ ಬಣ್ಣದ ಮನೆ ಹಾಗೂ ಇತರರನ್ನು ಪೊಲೀಸರು ಬಿಡುಗಡೆಗೊಳಿಸಿದರು. ಬಿಡುಗಡೆಗೊಂಡ ನಂತರ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.
ಅಂತಿಮವಾಗಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆಯನ್ನು ಮುಕ್ತಾಯಗೊಳಿಸಿದರು. ಇದೇ ವೇಳೆ, ನೀಟ್ ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಸಲ್ಲಿಸಲಾಯಿತು.






