Vijayanagara | ಜಿಲ್ಲಾಧಿಕಾರಿಗೆ ರಾಖಿ ಕಟ್ಟಿ ಶುಭಾಶಯ ಕೋರಿದ ವಿದ್ಯಾರ್ಥಿಗಳು

ಹೊಸಪೇಟೆ/ವಿಜಯನಗರ : ನಗರದ ವಿಜ್ಞಾನ ಇ-ಟೆಕ್ನೋ ವಿಜ್ಞಾನ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನೀಕೆರೆ ಅವರನ್ನು ಭೇಟಿ ಮಾಡಿ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನದ ಶುಭಾಶಯಗಳನ್ನು ಸಲ್ಲಿಸಿದರು.
ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಾ ಸೇವೆ ಸಲ್ಲಿಸುತ್ತಿರುವ ಜಿಲ್ಲಾಧಿಕಾರಿಯವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಅವರಿಗೆ ರಾಖಿ ಕಟ್ಟುವ ಮೂಲಕ ಗೌರವ ಸಲ್ಲಿಸಿದರು.
ಮಕ್ಕಳ ಆತ್ಮೀಯತೆ ಹಾಗೂ ಮುಗ್ಧ ಅಭಿಮಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಬೆರೆತ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೆರೆ ಅವರು ಮಕ್ಕಳನ್ನು ಪ್ರೋತ್ಸಾಹಿಸಿದರು.
ಉತ್ತಮ ಅಧಿಕಾರಿಗಳ ಕಾರ್ಯವೈಖರಿಯನ್ನು ವಿದ್ಯಾರ್ಥಿಗಳು ನೇರವಾಗಿ ಪರಿಚಯಿಸಿಕೊಳ್ಳುವುದರಿಂದ, ಭವಿಷ್ಯದಲ್ಲಿ ಉನ್ನತ ಶಿಕ್ಷಣ ಪಡೆದು ಸಮಾಜ ಹಾಗೂ ದೇಶಕ್ಕೆ ಉತ್ತಮ ಸೇವೆ ಸಲ್ಲಿಸುವ ಪ್ರೇರಣೆ ಅವರಲ್ಲಿ ಮೂಡಲಿದೆ ಎಂದು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಆಶಯ ವ್ಯಕ್ತಪಡಿಸಿದರು.
‘ನಾವು ಕೂಡ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಮುಂದೆ ಸಮಾಜಕ್ಕೆ ಹಾಗೂ ದೇಶಕ್ಕೆ ಉತ್ತಮ ಸೇವೆ ಸಲ್ಲಿಸಬೇಕು’ ಎಂಬ ಸ್ಫೂರ್ತಿಯನ್ನು ಮಕ್ಕಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಯವರೊಂದಿಗಿನ ಈ ಭೇಟಿ ಮಹತ್ವದ ಹೆಜ್ಜೆಯಾಯಿತು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯ ಕಿರಣ್ ಪಾಲ್, ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ಸ್ವಪ್ನಾ ಹಾಗೂ ಶಿಕ್ಷಕರಾದ ಐಶ್ವರ್ಯ, ಅನುರಾಧಾ ಪಿ., ಅನುರಾಧಾ ಬಿ., ಸೌಮ್ಯಾ, ಪೂಜಾ, ಅವಿನಾಶ್ ಮತ್ತು ರಾಕೇಶ್ ಉಪಸ್ಥಿತರಿದ್ದರು.






