Vijayanagara | ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿದರೆ ಆತ್ಮಹತ್ಯೆ ತಡೆಯಬಹುದು: ಡಾ.ಲಿಂಗರಾಜು
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ

ವಿಜಯನಗರ (ಹೊಸಪೇಟೆ) : ಆತ್ಮಹತ್ಯೆ ಪ್ರಕರಣಗಳಿಗೆ ಖಿನ್ನತೆ, ಆರ್ಥಿಕ ಹಾಗೂ ಸಾಮಾಜಿಕ ಸಮಸ್ಯೆಗಳು ಪ್ರಮುಖ ಕಾರಣಗಳಾಗಿದ್ದು, ಸಹನೆ, ತಾಳ್ಮೆ ಮತ್ತು ಸಕಾಲಿಕ ಸಮಾಲೋಚನೆಯ ಮೂಲಕ ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆಯ ಸಂಯುಕ್ತಾಶ್ರಯದಲ್ಲಿ ಹೊಸಪೇಟೆ ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನಸಿಕ ಖಿನ್ನತೆ, ಮಾನಸಿಕ ಅಸ್ವಸ್ಥತೆ, ನಿರುದ್ಯೋಗ ಸೇರಿದಂತೆ ಹಲವು ಕಾರಣಗಳು ಆತ್ಮಹತ್ಯೆಗೆ ಪ್ರೇರೇಪಿಸುತ್ತವೆ. ಇಂತಹ ಸಂದರ್ಭಗಳಲ್ಲಿ ಸೂಕ್ತ ಸಲಹೆ, ಮಾರ್ಗದರ್ಶನ ಮತ್ತು ಆಪ್ತ ಸಮಾಲೋಚನೆ ಅತ್ಯಂತ ಮುಖ್ಯವಾಗಿದೆ. ಆರೋಗ್ಯ ಇಲಾಖೆಯ ಮೂಲಕ ಮಾನಸಿಕ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಏಪ್ರಿಲ್ 2025ರಿಂದ ಆಗಸ್ಟ್ 2026ರವರೆಗೆ 15ರಿಂದ 60 ವರ್ಷದೊಳಗಿನ 438 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ 189 ಪುರುಷರು ಮತ್ತು 249 ಮಹಿಳೆಯರು ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ತಜ್ಞ ವೈದ್ಯರು, ಸಾಮಾಜಿಕ ಕಾರ್ಯಕರ್ತರಿಂದ ಸಮಾಲೋಚನೆ ಮತ್ತು ಅಗತ್ಯ ಔಷಧೋಪಚಾರ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್ ಮಾತನಾಡಿ, ಆತ್ಮಹತ್ಯೆ ತಡೆಗಟ್ಟಲು ಮಾನಸಿಕ ಆರೋಗ್ಯದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದರು. ಕುಟುಂಬದ ಸದಸ್ಯರು, ವಿಶೇಷವಾಗಿ ಪೋಷಕರು ಮಕ್ಕಳೊಂದಿಗೆ ಮುಕ್ತವಾಗಿ ಬೆರೆತು ಅವರ ಸಮಸ್ಯೆಗಳನ್ನು ಆಲಿಸುವ ವಾತಾವರಣ ನಿರ್ಮಿಸಬೇಕು ಎಂದು ಸಲಹೆ ನೀಡಿದರು.
ಮದ್ಯಪಾನ, ಜೂಜಾಟ, ಆನ್ಲೈನ್ ಬೆಟ್ಟಿಂಗ್ ಹಾಗೂ ಮಟ್ಕಾದಂತಹ ದುಶ್ಚಟಗಳು ವ್ಯಕ್ತಿಯನ್ನು ಆರ್ಥಿಕ ಮತ್ತು ಮಾನಸಿಕ ಸಂಕಷ್ಟಕ್ಕೆ ತಳ್ಳುತ್ತವೆ. ಯಾವುದೇ ವೃತ್ತಿಯೂ ಕೀಳಲ್ಲ, ಪ್ರತಿಯೊಂದು ವೃತ್ತಿಗೂ ತನ್ನದೇ ಆದ ಗೌರವವಿದೆ ಎಂದು ಅವರು ಹೇಳಿದರು.
ಹಿರಿಯ ನ್ಯಾಯವಾದಿ ಕೆ. ಜಂಬಣ್ಣ ಮಾತನಾಡಿ, ವಿಶ್ವದಲ್ಲಿ ಪ್ರತಿ ವರ್ಷ ಸುಮಾರು 7.2 ಲಕ್ಷ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಭಾರತದಲ್ಲಿ ಪ್ರತಿ 40 ಸೆಕೆಂಡಿಗೆ ಒಬ್ಬರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಹೇಳಿದರು. ಜಿಲ್ಲೆಯ ಅಂಕಿಅಂಶಗಳ ಪ್ರಕಾರ 35 ವರ್ಷದೊಳಗಿನ ಯುವಕರು ಹಾಗೂ ಪುರುಷರಲ್ಲಿ ಆತ್ಮಹತ್ಯೆ ಪ್ರಮಾಣ ಹೆಚ್ಚಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.
ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ. ಶರಣಬಸವ ಮಾತನಾಡಿ, ಮಾನಸಿಕ ಖಿನ್ನತೆ ಅಥವಾ ಒತ್ತಡದಿಂದ ಬಳಲುತ್ತಿರುವವರು ಮನೋವೈದ್ಯರು ಅಥವಾ ಆಪ್ತ ಸಮಾಲೋಚಕರ ನೆರವು ಪಡೆಯಲು ಹಿಂಜರಿಯಬಾರದು ಎಂದರು. ಆತ್ಮಹತ್ಯೆ ತಡೆಗಟ್ಟುವಲ್ಲಿ ವೈದ್ಯರ ಜೊತೆಗೆ ಶಿಕ್ಷಕರು, ಪೋಷಕರು, ಪೊಲೀಸ್ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಪಾತ್ರವೂ ಮಹತ್ವದ್ದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಭಾಸ್ಕರ್ ಡಿ., ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ಅಧಿಕಾರಿ ಡಾ. ಎಸ್.ಎಂ. ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಪೌರಕಾರ್ಮಿಕರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.






