Vijayanagara | ಪೊಲೀಸ್ ಠಾಣೆಯಲ್ಲಿ ಯುವಕನ ಅನುಮಾನಾಸ್ಪದ ಸಾವು; ಕುಟುಂಬದಿಂದ 'ಲಾಕಪ್ ಡೆತ್' ಆರೋಪ

ಹಗರಿಬೊಮ್ಮನಹಳ್ಳಿ/ವಿಜಯನಗರ : ಕುಟುಂಬ ಕಲಹದ ಹಿನ್ನೆಲೆಯಲ್ಲಿ 112 ತುರ್ತು ಸಹಾಯವಾಣಿ ಸಿಬ್ಬಂದಿಯಿಂದ ಪೊಲೀಸ್ ಠಾಣೆಗೆ ಕರೆತರಲಾಗಿದ್ದ 36 ವರ್ಷದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
"ಮೃತನ ಕುಟುಂಬಸ್ಥರು ಇದು ಸಹಜ ಸಾವು ಅಲ್ಲ, ಪೊಲೀಸ್ ಕಿರುಕುಳದಿಂದ ಸಂಭವಿಸಿದ ‘ಲಾಕಪ್ ಡೆತ್’" ಎಂದು ಆರೋಪಿಸಿದ್ದು, ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಮೃತರನ್ನು ಜಾಲಿನಗರ ನಿವಾಸಿ ಖಲೀಲ್ (36) ಎಂದು ಗುರುತಿಸಲಾಗಿದೆ. ಕುಟುಂಬ ಕಲಹದ ಹಿನ್ನೆಲೆಯಲ್ಲಿ ಅವರ ಪತ್ನಿ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದು, ಬಳಿಕ ಸ್ಥಳಕ್ಕೆ ತೆರಳಿದ ಸಿಬ್ಬಂದಿ ಖಲೀಲ್ ಅವರನ್ನು ಠಾಣೆಗೆ ಕರೆತಂದಿದ್ದರು ಎಂದು ತಿಳಿದುಬಂದಿದೆ.
"ಠಾಣೆಗೆ ಕರೆತಂದ ಬಳಿಕ ಏನಾಯಿತು, ಖಲೀಲ್ ಅವರ ಆರೋಗ್ಯ ಯಾವ ಕಾರಣಕ್ಕೆ ಹದಗೆಟ್ಟಿತು ಹಾಗೂ ಅವರು ಯಾವ ಸಂದರ್ಭಗಳಲ್ಲಿ ಮೃತಪಟ್ಟರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಠಾಣೆಯಲ್ಲಿಯೇ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ" ಎಂದು ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಪೊಲೀಸ್ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ ಇನ್ನೂ ಲಭ್ಯವಾಗಿಲ್ಲ.
ಖಲೀಲ್ ಅಸ್ವಸ್ಥಗೊಂಡ ನಂತರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಆಟೋದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾನ್ಹವಿ, ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ, ಸಿಪಿಐ ವಿಕಾಸ್ ಲಮಾಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ವೇಳೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆ ಆವರಣದಲ್ಲಿ ಮೃತನ ಸಂಬಂಧಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಿಳಿದುಬಂದಿದೆ.






