Vijayanagara | ಅಪರಿಚಿತ ವಾಹನ ಢಿಕ್ಕಿ : ಚಿರತೆ ಸಾವು

ಕೂಡ್ಲಿಗಿ/ವಿಜಯನಗರ : ಆಹಾರದ ಹುಡುಕಾಟದಲ್ಲಿ ಕಾಡಿನಿಂದ ನಾಡಿನತ್ತ ಬಂದಿದ್ದ ಚಿರತೆಯೊಂದು ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಕ್ರಾಸ್ ಬಳಿ ನಡೆದಿದೆ.
ಜೂನ್ 16ರ ರಾತ್ರಿ ಸುಮಾರು 10.30 ಗಂಟೆಗೆ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಸುಮಾರು ಎರಡೂವರೆ ವರ್ಷದ ಗಂಡು ಚಿರತೆಯೊಂದು ಆಹಾರ ಅರಸಿ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಅತಿವೇಗವಾಗಿ ಬಂದ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹೊಸಪೇಟೆ ಅರಣ್ಯ ವಲಯಾಧಿಕಾರಿ ಕೌಶಿಕ್, ಕೂಡ್ಲಿಗಿ ಪಿಎಸ್ಐ ಪ್ರಕಾಶ್ ಸಿ. ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರಣ್ಯದಂಚಿನ ಪ್ರದೇಶಗಳಲ್ಲಿ ಹೆದ್ದಾರಿಗಳನ್ನು ದಾಟುವ ವನ್ಯಜೀವಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಹೆಚ್ಚಿನ ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ. ವನ್ಯಜೀವಿಗಳ ರಕ್ಷಣೆಗಾಗಿ ಹೆದ್ದಾರಿಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿವೆ.






