Vijayanagara | ವಾರ್ತಾಭಾರತಿ ವರದಿ ಫಲಶ್ರುತಿ : ತುಂಗಭದ್ರಾ ಜಲಾಶಯದ ಗೇಟ್ಗಳಿಗೆ ಹೊಸ ಚೈನ್ ಲಿಂಕ್ ಅಳವಡಿಕೆ ಆರಂಭ

ಹೊಸಪೇಟೆ/ವಿಜಯನಗರ: ನಗರದ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಾಮಗಾರಿಗೆ ಸಂಬಂಧಿಸಿದಂತೆ ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ ವಿಶೇಷ ವರದಿಯ ಪರಿಣಾಮವಾಗಿ ಅಧಿಕಾರಿಗಳು ಹಾಗೂ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇದೀಗ ನೂತನ ಗೇಟ್ಗಳಿಗೆ ಹೊಸ ಚೈನ್ ಲಿಂಕ್ ಅಳವಡಿಕೆ ಕಾರ್ಯ ಆರಂಭಿಸಲಾಗಿದೆ. ಈ ಬೆಳವಣಿಗೆಯಿಂದ ರೈತರಲ್ಲಿ ಸಂತಸ ವ್ಯಕ್ತವಾಗಿದೆ.
ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ 33 ಕ್ರಸ್ಟ್ ಗೇಟ್ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಕೆಲವು ಗೇಟ್ಗಳಿಗೆ ಸುಮಾರು 80 ವರ್ಷ ಹಳೆಯದಾದ ಚೈನ್ ಲಿಂಕ್ಗಳನ್ನು ಮರುಬಳಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆ ರೈತರು ಹಾಗೂ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿತ್ತು.
ಹಳೆಯ ಚೈನ್ಗಳನ್ನು ಬಳಸುವುದರಿಂದ ಭವಿಷ್ಯದಲ್ಲಿ ಜಲಾಶಯದ ಸುರಕ್ಷತೆಗೆ ಅಪಾಯ ಉಂಟಾಗಬಹುದು ಎಂಬ ಆತಂಕದ ಹಿನ್ನೆಲೆ, ನೂತನ ಗೇಟ್ಗಳಿಗೆ ಸಂಪೂರ್ಣ ಹೊಸ ಚೈನ್ ಲಿಂಕ್ ಅಳವಡಿಕೆ ಮಾಡಬೇಕೆಂದು ವಾರ್ತಾಭಾರತಿ ವಿಶೇಷ ವರದಿ ಪ್ರಕಟಿಸಿತ್ತು. ಈ ವರದಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.
ರೈತ ಸಂಘಟನೆಗಳು ಹಾಗೂ ವಿವಿಧ ಮುಖಂಡರು ಕೂಡ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸರ್ಕಾರ ಮತ್ತು ತುಂಗಭದ್ರಾ ಬೋರ್ಡ್ ಅಧಿಕಾರಿಗಳಿಗೆ ಒತ್ತಾಯಿಸಿದ್ದರು.
ಈ ನಡುವೆ ಕಾಮಗಾರಿಯನ್ನು ಪರಿಶೀಲಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟ ಪರಿಶೀಲಿಸಿದ್ದರು. ಬಳಿಕ ಸರ್ಕಾರ ಮತ್ತು ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಗಳು ನಡೆದಿದ್ದು, ಇದೀಗ ಹಳೆಯ ಚೈನ್ಗಳನ್ನು ತೆರವುಗೊಳಿಸಿ ಹೊಸ ಚೈನ್ ಲಿಂಕ್ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ.
ಟಿ.ಬಿ. ಬೋರ್ಡ್ ಅಧಿಕಾರಿಗಳ ಪ್ರಕಾರ, ಅಗತ್ಯ ಹೊಸ ಚೈನ್ ಲಿಂಕ್ಗಳು ಈಗಾಗಲೇ ತಲುಪಿದ್ದು, ಹಂತ ಹಂತವಾಗಿ ಎಲ್ಲಾ ಗೇಟ್ಗಳಿಗೆ ಅಳವಡಿಕೆ ಮಾಡಲಾಗುತ್ತಿದೆ. ಇದರಿಂದ ಜಲಾಶಯದ ಸುರಕ್ಷತೆ ಮತ್ತಷ್ಟು ಬಲಪಡಲಿದ್ದು, ಭವಿಷ್ಯದಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯವು ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಎಂಟು ಜಿಲ್ಲೆಗಳ ಸುಮಾರು 14 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಒದಗಿಸುವ ಜೀವನಾಡಿಯಾಗಿದೆ. ಲಕ್ಷಾಂತರ ರೈತರ ಕೃಷಿ ಈ ಜಲಾಶಯದ ನೀರಿನ ಮೇಲೆ ಅವಲಂಬಿತವಾಗಿರುವುದರಿಂದ, ಕ್ರಸ್ಟ್ ಗೇಟ್ ಕಾಮಗಾರಿಯ ಗುಣಮಟ್ಟ ಅತ್ಯಂತ ಮಹತ್ವ ಪಡೆದುಕೊಂಡಿದೆ.
ಮಾಧ್ಯಮ ವರದಿಗೆ ಸ್ಪಂದಿಸಿ ಸರ್ಕಾರ ಹಾಗೂ ಅಧಿಕಾರಿಗಳು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ರೈತರು ಅಭಿಪ್ರಾಯಪಟ್ಟಿದ್ದು, ಉಳಿದ ಕಾಮಗಾರಿಯನ್ನೂ ಪಾರದರ್ಶಕತೆ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದ್ದಾರೆ.






