Vijayanagara | ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಿಎಸ್ಕೆ ವಿಶ್ವವಿದ್ಯಾಲಯ: 1,100 ರೂ. ಶುಲ್ಕ ಇಳಿಕೆ, ಹೆಚ್ಚುವರಿ ಹಣ ಮರುಪಾವತಿ

ಹೊಸಪೇಟೆ/ವಿಜಯನಗರ, ಆ.5: ಎಐಡಿಎಸ್ಓ (AIDSO) ನೇತೃತ್ವದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ ಬುಧವಾರ ನಡೆದ ‘ವಿಶ್ವವಿದ್ಯಾಲಯ ಚಲೋ’ ಪ್ರತಿಭಟನೆಗೆ ಸ್ಪಂದಿಸಿದ ವಿಶ್ವವಿದ್ಯಾಲಯ ಆಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರತಿಭಟನೆಯ ಬಳಿಕ ಕುಲಪತಿ ಪ್ರೊ. ಮುನಿರಾಜು ಅವರು ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳ ಪ್ರವೇಶ ಶುಲ್ಕದಲ್ಲಿ 1,100 ರೂ. ಇಳಿಕೆ ಮಾಡಲಾಗುವುದು. ಈಗಾಗಲೇ ವಿದ್ಯಾರ್ಥಿಗಳು ಪಾವತಿಸಿರುವ ಹೆಚ್ಚುವರಿ ಶುಲ್ಕವನ್ನು ಮರುಪಾವತಿಸಲಾಗುವುದು ಎಂದು ಘೋಷಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಬರಗಾಲದಿಂದ ಸಂಕಷ್ಟದಲ್ಲಿರುವ ಬಳ್ಳಾರಿ–ವಿಜಯನಗರ ಭಾಗದ ವಿದ್ಯಾರ್ಥಿಗಳ ಮೇಲೆ ಶುಲ್ಕ ಹೆಚ್ಚಳ ಹೆಚ್ಚುವರಿ ಹೊರೆ ತಂದಿದ್ದು, ಸರ್ಕಾರ ಹಾಗೂ ವಿಶ್ವವಿದ್ಯಾಲಯ ಆಡಳಿತ ಸಂಪೂರ್ಣ ಶುಲ್ಕ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಅಧ್ಯಕ್ಷ ರವಿಕಿರಣ್, ಮುಖಂಡ ಕೆ. ಈರಣ್ಣ ಸೇರಿದಂತೆ ಹಲವರು ಮಾತನಾಡಿ, ಶುಲ್ಕ ಏರಿಕೆಯಿಂದ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ್, ಉಪಾಧ್ಯಕ್ಷೆ ಎಂ. ಶಾಂತಿ, ಕಚೇರಿ ಕಾರ್ಯದರ್ಶಿ ನಿಹಾರಿಕಾ ಹಾಗೂ ವಿದ್ಯಾರ್ಥಿಗಳಾದ ಸುಹಾಸ್, ಸಿದ್ದು, ರಾಜಶೇಖರ್, ಸಿದ್ದೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.






