ಭೀಮಾತೀರದ 6 ಜನರ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಮಹೇಶ್ ತಳವಾರ್ ಕಾಲಿಗೆ ಗುಂಡು ಹಾರಿಸಿ ಬಂಧನ!

ವಿಜಯಪುರ: ಭೀಮಾತೀರದಲ್ಲಿ ನಡೆದಿದ್ದ 6 ಜನರ ಭೀಕರ ಸಾಮೂಹಿಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರ್ನನ್ನು ಚಡಚಣ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಗುಂಡು ಹಾರಿಸಿ ಬಂಧಿಸಿದ್ದಾರೆ.
ಬಂಧನದ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಬಲಗಾಲಿಗೆ ಚಡಚಣ ಸಿಪಿಐ ಪರಶುರಾಮ್ ಮನಗೂಳಿ ಅವರು ಗುಂಡು ಹಾರಿಸಿದ್ದಾರೆ.
ಕಳೆದ ಮೇ 29 ರಂದು ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಬಳಿಯ ಜಮೀನಿನಲ್ಲಿ ನಿರಾಳೆ ಕುಟುಂಬದ 5 ಸದಸ್ಯರು ಸೇರಿದಂತೆ ಒಟ್ಟು 6 ಜನರನ್ನು ಅತ್ಯಂತ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯಾಕಾಂಡ ನಡೆಸಲು ಮಹೇಶ್ ತಳವಾರ್ ಹಾಗೂ ಗ್ಯಾಂಗ್ ಬರೋಬ್ಬರಿ 15 ಲಕ್ಷ ರೂಪಾಯಿ ಸುಪಾರಿ ಪಡೆದುಕೊಂಡಿತ್ತು. ಈ ಸಾಮೂಹಿಕ ಹತ್ಯೆಗಾಗಿ ಯುವಕರನ್ನು ಸಂಘಟಿಸಿದ್ದ ಮಹೇಶ್, ಕಳೆದ 23 ದಿನಗಳಿಂದ ನಾಪತ್ತೆಯಾಗಿದ್ದ.
ತಿಕೋಟಾ ತಾಲೂಕಿನ ಇಟ್ಟಿಂಗಿಹಾಳ ಗ್ರಾಮದ ಹೊರವಲಯದಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಚಡಚಣ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಪೊಲೀಸರು ಆತನನ್ನು ಬಂಧಿಸಲು ಮುಂದಾದಾಗ, ಆರೋಪಿ ಮಹೇಶ್ ಪೊಲೀಸರ ಮೇಲೆಯೇ ಕಲ್ಲು ತೂರಿ ದಾಳಿ ನಡೆಸಿ ಓಡಿಹೋಗಲು ಯತ್ನಿಸಿದ್ದಾನೆ.
ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಆತ್ಮರಕ್ಷಣೆಗಾಗಿ ಚಡಚಣ ಸಿಪಿಐ ಪರಶುರಾಮ್ ಮನಗೂಳಿ ಅವರು ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ನಡೆಸಿದ ಕಲ್ಲು ತೂರಾಟದ ದಾಳಿಯಲ್ಲಿ ಚಡಚಣ ಠಾಣೆಯ ಸಿಬ್ಬಂದಿಗಳಾದ ಶೇಖರ್ ಪವಾರ್ ಹಾಗೂ ವಿಜಯಕುಮಾರ್ ಬನಸೋಡೆ ಅವರಿಗೆ ಗಾಯಗಳಾಗಿದ್ದು, ಅವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಗುಂಡೇಟಿನಿಂದ ಗಾಯಗೊಂಡಿರುವ ಪ್ರಮುಖ ಆರೋಪಿ ಮಹೇಶ್ ತಳವಾರ್ನನ್ನು ಸಹ ಅದೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ಮುಂದುವರಿದಿದೆ.






