Vijayapura| ಮುಂದಿನ ದಿನಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ; 160 ಕೋಟಿ ರೂ. ವೆಚ್ಚದ ಮೇಲ್ಸೇತುವೆ : ಸಿಎಂ ಸಿದ್ದರಾಮಯ್ಯ ಭರವಸೆ

ವಿಜಯಪುರ : ರಾಜ್ಯದ ಜನರು ಮತ್ತು ಹೈಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಜಯಪುರದ ವಿ.ಬಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರೆವೇರಿಸಿ ಮಾತನಾಡಿದರು.
ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಅರ್ಪಿಸಿದರು.
730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ :
ವಿಜಯಪುರ ಜಿಲ್ಲೆಯಲ್ಲಿ 800 ಕೋಟಿ ರೂ. ಗೂ ಹೆಚ್ಚು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚೆನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದರು .
ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್:
ಈ ಭಾಗದಲ್ಲಿ ಸೈಕ್ಲಿಸ್ಟ್ ಗಳಿಗಾಗಿ , ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ ನ್ನು ಸ್ಥಾಪಿಸಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ :
ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದರು.
160 ಕೋಟಿ ವೆಚ್ಚದ ಮೇಲ್ಸೇತುವೆ:
ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ 160 ಕೋಟಿ ವೆಚ್ಚದ ಮೂರು ಕಿಮೀ ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದು ಅದನ್ನು ನೆರವೇರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್, ಸಚಿವ ಶಿವಾನಂದ ಪಾಟೀಲ್, ಶಾಸಕ, ಬಸನಗೌಡ ಯತ್ನಾಳ್, ಮೊದಲಾದವರು ಉಪಸ್ಥಿತರಿದ್ದರು.







