Vijayapura | ಆ.26ರಿಂದ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್’ ರಾಜ್ಯಾದ್ಯಂತ ಸೀರತ್ ಅಭಿಯಾನಕ್ಕೆ ಚಾಲನೆ

ವಿಜಯಪುರ: ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನದ ಅಂಗವಾಗಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್ (ಸ)’ ಶೀರ್ಷಿಕೆಯಡಿ ಬೃಹತ್ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಜಿಲ್ಲಾಧ್ಯಕ್ಷ ಎಂ.ಎಚ್. ಬಳಗಾನೂರ ತಿಳಿಸಿದರು.
ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್ (ಸ) ಅವರ ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಘನತೆ ಹಾಗೂ ಏಕತೆಯ ಸಂದೇಶವನ್ನು ಸಮಾಜಕ್ಕೆ ತಲುಪಿಸುವುದೇ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ವ್ಯಕ್ತಿ ಮತ್ತು ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಮೂಲಕ ಸಾಮಾಜಿಕ ಪರಿವರ್ತನೆಗೆ ಈ ಅಭಿಯಾನ ಸಹಕಾರಿಯಾಗಲಿದೆ ಎಂದರು.
ಪ್ರವಾದಿಯವರ ಕುರಿತು ಸಮಾಜದಲ್ಲಿ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಿ, ವಿವಿಧ ಸಮುದಾಯಗಳ ನಡುವೆ ಸೌಹಾರ್ದತೆ ಮತ್ತು ಪರಸ್ಪರ ಬಾಂಧವ್ಯವನ್ನು ಬಲಪಡಿಸಲು ಅಭಿಯಾನದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಎರಡು ಕೃತಿಗಳ ಬಿಡುಗಡೆ :
ಅಭಿಯಾನದ ಅಂಗವಾಗಿ ಖ್ಯಾತ ಸಾಹಿತಿ ಯೋಗೇಶ್ ಮಾಸ್ಟರ್ ಅವರ ‘ಮಾನವ ಮನಸ್ಸಿನ ಕೃಷಿಕ – ಮನದೊಡೆಯ ಪ್ರವಾದಿ ಮುಹಮ್ಮದ್ (ಸ)’ ಹಾಗೂ ವಾರ್ತಾ ಭಾರತಿ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಅವರ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ)’ ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.
ಮಾಜಿ ಜಿಲ್ಲಾಧ್ಯಕ್ಷ ಎಂ.ಡಿ. ಯೂಸುಫ್ ಖಾಜಿ ಮಾತನಾಡಿ, ಸೀರತ್ ಅಭಿಯಾನ ಯಾವುದೇ ಧರ್ಮ ಪ್ರಚಾರವಲ್ಲ. ಪ್ರವಾದಿ ಮುಹಮ್ಮದ್ (ಸ) ಅವರ ಮಾನವೀಯ ಮೌಲ್ಯಗಳು, ನೈತಿಕತೆ ಮತ್ತು ಶಾಂತಿಯ ಸಂದೇಶವನ್ನು ಜನರಿಗೆ ಪರಿಚಯಿಸುವ ಸಾಮಾಜಿಕ ಜಾಗೃತಿ ಅಭಿಯಾನವಾಗಿದೆ ಎಂದು ಹೇಳಿದರು.
ಅಭಿಯಾನದ ಅವಧಿಯಲ್ಲಿ ವಿಚಾರಗೋಷ್ಠಿ, ಸಾರ್ವಜನಿಕ ಸಮಾವೇಶ, ಸಂವಾದ ಕಾರ್ಯಕ್ರಮ, ಸೀರತ್ ಪ್ರವಚನ, ಪ್ರದರ್ಶನ, ಸೌಹಾರ್ದ ರ್ಯಾಲಿ ಹಾಗೂ ಸಮಾಜಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗುವುದು.
ಸ್ಥಳೀಯ ಮಟ್ಟದಲ್ಲಿ ಪುಸ್ತಕ ವಿತರಣೆ, ನಿಬಂಧ ಸ್ಪರ್ಧೆ, ಮೊಹಲ್ಲಾ ಸೀರತ್ ಕಾರ್ಯಕ್ರಮಗಳು, ಗಣ್ಯರ ಸಭೆಗಳು ಹಾಗೂ ಶಿವನಗುತ್ತಿ ಮತ್ತು ಕೃಷ್ಣಾಪುರದಲ್ಲಿ ವಿಶೇಷ ಸೀರತ್ ಕಾರ್ಯಕ್ರಮಗಳು ನಡೆಯಲಿವೆ. ಮಹಿಳಾ ವಿಭಾಗದ ನೇತೃತ್ವದಲ್ಲಿ ಆಸ್ಪತ್ರೆ, ವೃದ್ಧಾಶ್ರಮ ಮತ್ತು ಅನಾಥಾಶ್ರಮಗಳಿಗೆ ಭೇಟಿ ನೀಡಿ ಸೇವಾ ಕಾರ್ಯಗಳನ್ನೂ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಜಿಲ್ಲಾ ಅಧ್ಯಕ್ಷ ಸಮದಾನಿ ಖಾಜಿ, ಅಬ್ದುಲ್ ರಹೀಮಾನ್ ನಾಸೀರ್, ಎನ್.ಎಂ ಖಾಜಿ, ಇಲಕಲ್ಲ ಆಶೀಫ್ ಬಿಳಿಕುದರಿ, ಎಸ್.ಎಚ್.ನದಾಫ್, ಎಸ್.ಪಿ ಜಾಗೀರದಾರ್, ರಫೀಕ್ ಸಾರವಾಡ, ರೂಸ್ಥಮ್ ಅತ್ತಾರ ಸೇರಿದಂತೆ ಮುಂತಾದವರು ಇದ್ದರು.






